ಈ.ಡಿ.ಗೆ ಸಮರ್ಪಕ ಉತ್ತರಗಳನ್ನು ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

Update: 2019-09-20 13:57 GMT

ಹೊಸದಿಲ್ಲಿ, ಸೆ.20: ಜಾರಿ ನಿರ್ದೇಶನಾಲಯ(ಈ.ಡಿ.)ದ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಸಮರ್ಪಕವಾಗಿ ಉತ್ತರ ನೀಡಿದ್ದೇನೆ. ಅವರಿಗೆ ಎಲ್ಲವೂ ಸ್ಪಷ್ಟವಾಗಿದೆ ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಅಧಿಕಾರಿಗಳು ನ್ಯಾಯಾಲಯದ ಕಲಾಪದಲ್ಲಿ ತಲ್ಲೀನರಾಗಿದ್ದರಿಂದ ಕೆಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ. ಇಂದು(ಶುಕ್ರವಾರ) ನಡೆಯುವ ವಿಚಾರಣೆಗೂ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಅಧಿಕಾರಿಗಳು ಕೇಳಿದ ದಾಖಲೆಗಳನ್ನೂ ಒದಗಿಸಿದ್ದೇನೆ. ಕೆಲವು ದಾಖಲೆಗಳು ತಕ್ಷಣಕ್ಕೆ ಲಭ್ಯವಿಲ್ಲದ್ದರಿಂದ 8 ದಿನಗಳ ಸಮಯಾವಕಾಶ ನೀಡಿದ್ದಾರೆ. ಅವುಗಳನ್ನು ಕಳುಹಿಸಿಕೊಡುತ್ತೇನೆ. ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ವಿಚಾರಣೆ ನಡೆಯುತ್ತಿರುವುದರಿಂದ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ವಿಚಾರಣೆಗೆ ಸಂಬಂಧಿಸಿದಂತೆ ಕಾಲ್ಪನಿಕ ವರದಿಗಳು ಬರುತ್ತಿವೆ. ಅವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದರಿಂದಾಗಿ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೋವಾಗಿದೆ. ಹಾಗಾಗಿ ಕಾಲ್ಪನಿಕ ವರದಿ ಮಾಡುವ ಬದಲು ಎಲ್ಲ ಮಾಧ್ಯಮಗಳೂ ಸತ್ಯಾಂಶಗಳನ್ನು ವರದಿ ಮಾಡಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News