ಅತಿವೃಷ್ಟಿಗೆ ನಲುಗಿದ ಶಿವಮೊಗ್ಗ ಜಿಲ್ಲೆ: ರೈತರಿಗೆ 1.46 ಕೋಟಿ ರೂ. ಪರಿಹಾರ ವಿತರಣೆ

Update: 2019-09-20 17:35 GMT

ಶಿವಮೊಗ್ಗ, ಸೆ. 20: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ 15,573 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿರುವುದನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ.ಕಿರಣ್‍ ಕುಮಾರ್ ರವರು ಮಾಹಿತಿ ನೀಡಿದ್ದಾರೆ. 

ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ವಿವರ ನೀಡಿದ್ದಾರೆ. 

ಸುಮಾರು 19,000 ರೈತರು ಪರಿಹಾರ ಧನ ನೀಡುವಂತೆ ಆನ್‍ಲೈನ್ ಮೂಲಕ ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ 1710 ಹೆಕ್ಟೇರ್ ಬೆಳೆ ಹಾನಿಗೊಳಗಾದ ಪ್ರದೇಶದಲ್ಲಿನ ರೈತರಿಗೆ 1.46 ಕೋಟಿ ರೂ. ಪರಿಹಾರ ಧನ ವಿತರಿಸಲಾಗಿದೆ ಎಂದು ಅಂಕಿಅಂಶ ನೀಡಿದ್ದಾರೆ.

ಕಳೆದ ಮಾಹೆಯಲ್ಲಿ ಶಿಕಾರಿಪುರದಲ್ಲಿ ರಸಗೊಬ್ಬರ ವಿತರಣೆಯಲ್ಲಿ ಅಲ್ಪ ಮಟ್ಟಿನ ವ್ಯತ್ಯಯ ಉಂಟಾಗಿತ್ತು. ಕೂಡಲೇ ರಸಗೊಬ್ಬರವನ್ನು ತರಿಸಿ, ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ಮಾರಾಟಗಾರರ ಮೂಲಕ ವಿತರಿಸಲಾಗಿದೆ. ಪ್ರಸ್ತುತ ಜಿಲ್ಲೆಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆಬೀಜ ದಾಸ್ತಾನಿದೆ ಎಂದು ಮಾಹಿತಿ ನೀಡಿದರು. 

ವಿಳಂಬ: ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ.ಕಾಂತೇಶ್‍ ಮಾತನಾಡಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೊರೆಸಿ ಕೊಡಬೇಕಾದ ಕೊಳವೆ ಬಾವಿಗಳು ಪೂರ್ಣಗೊಳ್ಳದೇ ದಿನಕಳೆಯುತ್ತಿದೆ. ಸಂಬಂಧಿಸಿದ ನಿಗಮಗಳ ಜಿಲ್ಲಾ ಅಧಿಕಾರಿಗಳು ಈ ವಿಷಯದ ಕಡೆಗೆ ಸೂಕ್ತ ಗಮನಹರಿಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಅಸಮಾಧಾನ: ಜಿಲ್ಲೆಯ ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಪೂರೈಸುವ ಸದುದ್ದೇಶದಿಂದ ಕೋಟ್ಯಾಂತರ ರೂ. ವೆಚ್ಚದಲ್ಲಿ ಜಿಲ್ಲೆಯ 255 ಆಯ್ದ ಪ್ರದೇಶಗಳಲ್ಲಿ ಆರಂಭಿಸಲು ಸೂಚಿಸಲಾಗಿದ್ದ ಶುದ್ದ ಕುಡಿಯುವ ನೀರು ಘಟಕಗಳಲ್ಲಿ ಕೆಲವು ದುರಸ್ತಿಯಲ್ಲಿದ್ದರೆ, ಇನ್ನೂ ಕೆಲವು ಕಾರ್ಯಾರಂಭ ಮಾಡದಿರುವ ಕುರಿತು ಸಾರ್ವಜನಿಕ ವಲಯದಿಂದ ದೂರು ಕೇಳಿಬರುತ್ತಿವೆ ಎಂದು ಕೆ.ಇ.ಕಾಂತೇಶ್ ಅಸಮಾಧಾನ ವ್ಯಕ್ತಪಡಿಸಿದರು. 

ಜಿಲ್ಲೆಯ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣ ಪ್ರದೇಶದಲ್ಲಿನ ಮಕ್ಕಳು ಮಾನಸಿಕ ವಿಕಾರಗಳಿಗೊಳಗಾಗುವ ಮೊಬೈಲ್ ಗೇಮ್‍ನಂತಹ ವ್ಯಸನಗಳಿಗೆ ಬಲಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಭದ್ರಾವತಿ ಮತ್ತು ಶಿವಮೊಗ್ಗ ಪಟ್ಟಣದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗಾಗಿ ತಜ್ಞ ವೈದ್ಯರಿಂದ ಒಂದು ದಿನದ ಪರಿವರ್ತನಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಗನಾಯ್ಕ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಸಿಇಓ ವೈಶಾಲಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂತ್ರಸ್ತರಿಗೆ ಪಡಿತರ ವಿತರಿಸಿ
ಜಿಲ್ಲೆಯ ನೆರೆ ಸಂತ್ರಸ್ತ ಕುಟುಂಬಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಡಿತರ ವಿತರಣೆ ಮಾಡುವಂತೆ ಹಾಗೂ ಅಂತಹ ಕುಟುಂಬಗಳಿಗೆ ಹೊಸ ಪಡಿತರ ಕೂಪನ್ ನೀಡುವಂತೆ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ.ಕಾಂತೇಶ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ನೆರೆ ಸಂತ್ರಸ್ತ ಕುಟುಂಗಳಲ್ಲಿನ ವಿದ್ಯಾರ್ಥಿಗಳ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳೂ ಕೂಡ ನಾಶವಾಗಿರುವುದು ತಿಳಿದಿದ್ದು, ಅಂತಹ ಮಕ್ಕಳಿಗೂ ಶಿಕ್ಷಣ ಇಲಾಖೆಯಿಂದ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News