ವಿಶೇಷ ಸ್ಥಾನಮಾನ ರದ್ಧತಿಯಿಂದ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಹಿನ್ನಡೆ: ಡಿ.ವಿ.ಸದಾನಂದ ಗೌಡ

Update: 2019-09-21 15:58 GMT

ಉಡುಪಿ, ಸೆ.21: ಕಾಶ್ಮೀರ ಭಯೋತ್ಪಾದಕರ ಸ್ವರ್ಗ ಆಗಲು ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವುದೇ ಕಾರಣ. ಇದೀಗ ಆ ಸ್ಥಾನಮಾನ ರದ್ಧುಗೊಳಿಸಿರುವುದರಿಂದ ಅಲ್ಲಿ ಭಯೋತ್ಪಾದನೆಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಷ್ಟ್ರೀಯ ಏಕತಾ ಅಭಿಯಾನದ ಪ್ರಯುಕ್ತ ಮಣಿಪಾಲದ ಕಂಟ್ರಿ ಇನ್ ಹೊಟೇಲಿನ ಸಭಾಂಗಣದಲ್ಲಿ ಆಯೋಜಿಸಲಾದ 370ನೆ ವಿಧಿ ರದ್ಧತಿ ಬಗ್ಗೆ ಜನ ಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅಭಿವೃದ್ದಿ ಹಾಗೂ ಉತ್ತಮ ಆಡಳಿತ ಬಹಳ ಮುಖ್ಯವಾಗಿರುತ್ತದೆ. ಒಂದು ದೇಶಕ್ಕೆ ಎರಡು ಧ್ವಜ, ಎರಡು ಸಂವಿಧಾನ, ಎರಡು ಕಾನೂನು ದೊಡ್ಡ ಕಳಂಕವಾಗಿದೆ. ಅಖಂಡ ಭಾರತ ನಿರ್ಮಾಣ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದರು.

ಮುಂದೆ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿಯನ್ನು ರದ್ದು ಮಾಡಲು ಯಾರಿಗೂ ಸಾಧ್ಯವಿಲ್ಲ. ಯಾಕೆ ಇನ್ನು ಕಾಂಗ್ರೆಸ್ ಎಂದಿಗೂ ಅಧಿಕಾರಕ್ಕೆ ಬರುವುದೇ ಇಲ್ಲ. ಈ ಮೊದಲು ಕೇಂದ್ರ ಸರಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡ ಕಾಶ್ಮೀರದ ರಾಜಕಾರಣಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಇಂದು ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಇದು ಕೂಡ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಒಂದು ಭಾಗವಾಗಿದೆ. ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿದ ಶೇ.85-90ರಷ್ಟು ಭರವಸೆಗಳನ್ನು ಈಡೇರಿಸಲಾಗಿದೆ. ಒಂದು ದೇಶ, ಒಂದು ಚುನಾವಣೆ, ಒಂದು ತೆರಿಗೆ ನಮ್ಮ ಮುಂದಿರುವ ಗುರಿಯಾಗಿದೆ. ಆದರೆ ಒಂದು ಭಾಷೆ ಎಂಬ ವಿಚಾರ ನಮ್ಮ ಮುಂದೆ ಇಲ್ಲ ಎಂದರು.

ಈಗಾಗಲೇ ಕಾಶ್ಮೀರ ಬಿಟ್ಟು ಬಂದವರಿಗೆ ಮತ್ತೆ ಕಾಶ್ಮೀರಕ್ಕೆ ವಾಪಾಸ್ಸು ಹೋಗಲು ಎಲ್ಲ ರೀತಿಯ ವ್ಯವಸ್ಥೆಯನ್ನು ಕೇಂದ್ರ ಸರಕಾರ ಮಾಡಲಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ನಾವು ಮುಂದಿನ ದಿನಗಳಲ್ಲಿ ಪಡೆದೇ ಪಡೆಯುತ್ತೇವೆ. ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂಬ ಆತಂಕ ಬೇಡ. ಈ ವಿಚಾರದಲ್ಲಿ ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.

ಕಾಶ್ಮೀರದಲ್ಲಿ ಪ್ರತಿಯೊಂದು ಇಲಾಖೆಯಿಂದಲೂ ಒಂದೊಂದು ರೀತಿಯ ಯೋಜನೆಗಳನ್ನು ಹಮ್ಮಿಕೊಳ್ಳಲು ಈಗಾಗಲೇ ಚಿಂತನೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ನನ್ನ ಇಲಾಖೆಗೆ ಸಂಬಂಧಪಟ್ಟಂತೆ ಯೋಜನೆ ಜಾರಿಗೆ ತರಲು ಕಾಶ್ಮೀರ ರಾಜ್ಯಪಾಲರು ಹಾಗೂ ಮುಖ್ಯಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ದಿಕ್ಸೂಚಿ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ವಹಿಸಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕರುಗಳಾದ ಸುನೀಲ್ ಕುಮಾರ್, ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಸುಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮುಖಂಡ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಾಣೂರು ನರಸಿಂಹ ಕಾಮತ್ ಸ್ವಾಗತಿಸಿದರು. ವಿಜಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News