​ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ: ಶಾಸಕ ಕಾಮತ್

Update: 2019-09-22 14:02 GMT

ಮಂಗಳೂರು, ಸೆ.22: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಪೂರ್ಣ ಪ್ರಮಾಣದ ಸಹಕಾರ ನಿಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಎಕ್ಕೂರು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಿದ್ದು ನೂತನ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು. ಬೆಂಗ್ರೆ ಸೇರಿದಂತೆ ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಇನ್ನಷ್ಟು ಅಂಗವನಾಡಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಬೇಡಿಕೆಗಳನ್ನು ಪೂರೈಸುವಲ್ಲಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.

ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಕೊಡಮಾಡುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ವ್ಯವಸ್ಥಿತವಾಗಿ ನೀಡಬೇಕು. ಅಂಗನವಾಡಿಯ ಮಕ್ಕಳ ಆಹಾರದ ಗುಣಮಟ್ಟವನ್ನೂ ಏರಿಸುವಂತೆ ಸರಕಾರಕ್ಕೆ ಮನವಿ ಮಾಡುವುದಾಗಿ ಕಾಮತ್ ಹೇಳಿದರು.

ಕಾರ್ಯಕ್ರಮದಲ್ಲಿ ಮನಪಾ ಮಾಜಿ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಭಾಸ್ಕರಚಂದ್ರ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಪಿ, ಓಂಕಾರ ಶಾಖೆ ಇದರ ಅಧ್ಯಕ್ಷ ಭರತ್ ಶೆಟ್ಟಿ, ನಂದಾದೀಪ ಮಹಿಳಾ ಮಂಡಲದ ನಾಯಕಿ ತೇಜಸ್ವಿನಿ ಬಿ.ಆಚಾರ್ಯ, ಅಂಗನವಾಡಿ ಮೇಲ್ವಿಚಾರಕಿ ಅನುಪಮಾ, ಗ್ರಾಮಕರಣಿಕ ರಾಜ್‌ಕುಮಾರ್, ರತ್ನಾಕರ್ ರಾವ್, ಕಿರಣ್ ರೈ ಎಕ್ಕೂರು, ಭರತ್‌ರಾಜ್ ಶೆಟ್ಟಿ ಎಕ್ಕೂರು ಮತ್ತಿತರರು ಉಪಸ್ಥಿತರಿದ್ದರು.

ನಂದಾದೀಪ ಮಹಿಳಾ ಮಂಡಲದ ಕಾರ್ಯದರ್ಶಿ ರೇಖಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ತನುಜಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News