ಗ್ರಾಮೀಣ ಯುವಜನರಿಗೆ ಕೌಶಲ್ಯ ತರಬೇತಿ ಅಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

Update: 2019-09-25 16:24 GMT

ಬೆಂಗಳೂರು, ಸೆ.25: ಗ್ರಾಮೀಣ ಪ್ರದೇಶದ ಯುವಜನರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಅವಕಾಶಗಳನ್ನು ಕಲ್ಪಿಸುವಂತಾಗಬೇಕು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ. 

ಬುಧವಾರ ನಗರದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಎನ್‌ಐಪಿಎಂ ಅಂತರ್‌ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಯುವಜನರು ನಗರ ಪ್ರದೇಶಗಳಿಗೆ ವಲಸೆ ಬರುತ್ತಿದ್ದಾರೆ. ಇದನ್ನು ತಡೆಯಲು ಹಾಗೂ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಿಕೊಡಲು ಅವರಿಗೆ ಕೌಶಲ್ಯ ತರಬೇತಿಗಳನ್ನು ನೀಡುವ ಅಗತ್ಯವಿದೆ ಎಂದರು. ಭಾರತದಲ್ಲಿ ಮುಂದಿನ ದಶಕದೊಳಗೆ ಅಂದಾಜು 250 ಮಿಲಿಯನ್ ರಷ್ಟು ಜನರು ಉದ್ಯೋಗ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಉದ್ಯಮಗಳು ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಎಲ್ಲರಿಗೂ ಉದ್ಯೋಗಾವಕಾಶಗಳು ಕಲ್ಪಿಸುವಂತಾಗಬೇಕು. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಮತ್ತು ಕೇಂದ್ರ ಸರಕಾರಗಳು ಯುವಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೆ, ಇದು ಇಷ್ಟಕ್ಕೆ ಸೀಮಿತವಾಗಬಾರದು ಎಂದ ಅವರು, ಸ್ವಯಂ ಸೇವಾ ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಕರ್ತವ್ಯವನ್ನು ಅರಿತು ಕೌಶಲ್ಯ ವೃದ್ಧಿಸಲು ಮುಂದಾಗಬೇಕು ಎಂದು ವೆಂಕಯ್ಯ ನಾಯ್ಡು ಕರೆ ನೀಡಿದರು.

ದಿನದಿಂದ ದಿನಕ್ಕೆ ಪ್ರಪಂಚ ಬದಲಾಗುತ್ತಿದ್ದು, ಅದರ ನಡುವೆ ಜನರ ಜೀವನ ಶೈಲಿಯೂ ಹೊಸತನದಿಂದ ಕೂಡಿದೆ. ಹೀಗಾಗಿ, ಜನರಿಗೆ ಸವಾಲಾಗಿ ಪರಿಣಮಿಸಿರುವ ಉದ್ಯೋಗದ ಸಮಸ್ಯೆಯ ನಿವಾರಣೆಗಾಗಿ ಅಣಿಯಾಗಬೇಕು. ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಆ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಮಹಿಳೆಯರಿಗೆ ಆದ್ಯತೆ ನೀಡಿ: ದೇಶದ ದುಡಿಯುವ ವರ್ಗದಲ್ಲಿ ಮಹಿಳೆಯರ ಪಾಲು ಅಪಾರವಾದುದಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರಿಗೂ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಅವರಿಗೂ ಅವಕಾಶಗಳನ್ನು ಕಲ್ಪಿಸಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಮಹಿಳೆಯರನ್ನು ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಪ್ರತಿಯೊಂದು ವೃತ್ತಿಯನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದೇಶದಲ್ಲಿ ಇಂದು ಚಾಲಕ ವೃತ್ತಿಯನ್ನು ಗೌರವದಿಂದ ಕಾಣುತ್ತಾರೆ. ಆದರೆ, ನಮ್ಮಲ್ಲಿ ಅಂತಹ ಪರಿಸ್ಥಿತಿಯಿಲ್ಲ ಎಂದ ವೆಂಕಯ್ಯ ನಾಯುಡು, ನಮ್ಮ ದೇಶದಲ್ಲಿನ ಪರಿಸ್ಥಿತಿ ಬದಲಾಗಬೇಕು. ಪ್ರತಿಯೊಬ್ಬರಲ್ಲಿರುವ ಕೌಶಲ್ಯದ ಪ್ರತಿಭೆಯನ್ನು ಹೆಕ್ಕಿ ತೆಗೆಯಬೇಕು ಎಂದರು.

ಒಂದು ಕಾಲದಲ್ಲಿ ಭಾರತ ವಿಶ್ವಗುರು ಆಗುತ್ತಿತ್ತು. ನಳಂದ, ತಕ್ಷಶಿಲಾದಂತಹ ಶಿಕ್ಷಣ ಸಂಸ್ಥೆಗಳಿಗೆ ದೇಶ-ವಿದೇಶಗಳಿಂದ ಬರುತ್ತಿದ್ದರು. ಆದರೆ, ಇದೀಗ ಆ ಸ್ಥಿತಿ ಇಲ್ಲದಾಗಿದ್ದು, ಅದನ್ನು ಮರುಸ್ಥಾಪಿಸಬೇಕಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಇಂದಿನ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಆದುದರಿಂದ ನಮ್ಮ ಯುವಜನರಿಗೆ ಕೌಶಲ್ಯ ವೃದ್ಧಿಸಬೇಕು. ಇಡೀ ದೇಶದಲ್ಲಿ ಕರ್ನಾಟಕ ಮೊದಲ ಬಾರಿಗೆ ಕೌಶಲ್ಯಾಭಿವೃದ್ಧಿ ನೀತಿ ಜಾರಿ ಮಾಡುವ ಮೂಲಕ ಮಾದರಿಯಾಗಿದೆ ಎಂದು ನುಡಿದರು.

ರಾಜ್ಯಾದ್ಯಂತ ಶಾಲೆ, ಕಾಲೇಜುಗಳಲ್ಲಿನ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಕೇಂದ್ರ ಸರಕಾರದ ಸ್ಕಿಲ್ ಇಂಡಿಯಾ, ಡಿಜಿಟಲ್ ಇಂಡಿಯಾ ಸೇರಿದಂತೆ ಹಲವು ಯೋಜನೆಗಳನ್ನು ಪರಿಚಯಿಸಿದ್ದು, ಇದರಲ್ಲಿ ಇಂದಿನ ಯುವ ಸಮುದಾಯ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯಪಾಲ ವಜೂಭಾಯಿ ವಾಲಾ, ಎನ್‌ಐಪಿಎಂನ ರಾಷ್ಟ್ರೀಯ ಅಧ್ಯಕ್ಷ ವಿಶ್ವೇಶ್ ಪಿ.ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಡಾ.ಪ್ರದೀಪ್ ಕುಮಾರ್ ಸೇರಿದಂತೆ ಮತ್ತಿತರರಿದ್ದರು.

ನವೋದ್ಯಮಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದರಿಂದ ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕೇಂದ್ರ ಸರಕಾರವು ಅಸಂಘಟಿತ ವಲಯದಲ್ಲಿಯೂ ಕೌಶಲ್ಯ ಅಭಿವೃದ್ಧಿಗೆ ಪ್ರಾದ್ಯಾನತೆ ನೀಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿಯಲ್ಲಿ ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಳ್ಳಬೇಕು.

- ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News