ಪಡಿತರ ಚೀಟಿಗೆ ಇ-ಕೆವೈಸಿ ಅಪ್‌ಡೇಟ್ ಕಾರ್ಯ ಆರಂಭ

Update: 2019-09-25 17:29 GMT

ಉಡುಪಿ, ಸೆ.25: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್,ಎಎವೈ,ಎಪಿಎಲ್) ಕಾರ್ಡು ದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡಬೇಕಾಗಿದ್ದು, ಇದಕ್ಕೆ ನ್ಯಾಯಬೆಲೆ ಅಂಗಡಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥ ರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ ವಿವರ ಗಳನ್ನು ಹಾಗೂ ಪಡಿತರ ಚೀಟಿದಾರರ ಜಾತಿಯ ವಿವರವನ್ನು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಇತರೆ) ಜಾತಿ ಪ್ರಮಾಣ ಪತ್ರ ವಿವರಗಳನ್ನು ಸಹ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಜಾತಿಯವರಾಗಿದ್ದಲ್ಲಿ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಗೆ ಬರಬೇಕಾಗುವುದು. ನ್ಯಾಯಬೆಲೆ ಅಂಗಡಿ ಮಾಲಿಕರು ಜಾತಿ ಪ್ರಮಾಣ ಪತ್ರದ ಸಂಖ್ಯೆ ನಮೂದಿಸಿ ತಮ್ಮ ಲಾಗಿನಲ್ಲಿಯೇ ಪರಿಶೀಲಿಸಿ, ಇತರೆ ವಿವರದೊಂದಿಗೆ ನಮೂದು ಮಾಡಬೇಕು.

ಕಾರ್ಡುದಾರರು ಕಾರ್ಡಿನಲ್ಲಿ ಇರುವ ಎಲ್ಲಾ ಸದಸ್ಯರೊಂದಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗೆ ತಪ್ಪದೇ ಕಡ್ಡಾಯವಾಗಿ ಹಾಜರಾಗಿ ತಮ್ಮ ಬಯೋ ದೃಢೀಕರಣ ಮೂಲಕ ಇ-ಕೆವೈಸಿ ಅಪ್‌ಡೇಟ್ ಮಾಡಬೇಕಾಗಿದೆ. ವಯೋವೃದ್ಧರ ಮರಣ, ಕುಷ್ಠರೋಗಿ, ಅಂಗಕಲ(ಬೆರಳುಗಳಿಲ್ಲದ) ಎಂಡೋಸಲ್ಫಾನ್, ಕುಟುಂಬದೊಂದಿಗೆ ವಾಸವಿರದ ಸದಸ್ಯರ ಇ-ಕೆವೈಸಿ ಅಪ್‌ಡೇಟ್ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಸದಸ್ಯರಿಗೆ ಮಾತ್ರ ಇ-ಕೆವೈಸಿ ವಿನಾಯಿತಿಯನ್ನು ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ನೀಡಬಹುದಾಗಿದೆ.

ಕಾರ್ಡುದಾರರು ಇ-ಕೆವೈಸಿ ಅಪ್‌ಡೇಟ್ ಕಾರ್ಯವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಅ.1ರಿಂದ 10ರವರೆಗೆ ಬೆಳಗ್ಗೆ 7:00ರಿಂದ ಅಪರಾಹ್ನ 12:00 ರವರೆಗೆ ಹಾಗೂ ಸಂಜೆ 4:00ರಿಂದ ರಾತ್ರಿ 8:00 ಗಂಟೆಯವರೆಗೆ ಇ-ಕೆವೈಸಿ ಅಪ್‌ಡೇಟ್ ಮಾಡಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅ.11ರಿಂದ 25ರವರೆಗೆ ಆಹಾರಧಾನ್ಯ ವಿತರಿಸಲಾಗುವುದು. ಈ ಸಮಯದಲ್ಲಿ ಇ-ಕೆವೈಸಿ ಅಪ್‌ಡೇಟ್ ಮಾಡಿಕೊಳ್ಳಲು ಅವಕಾಶವಿಲ್ಲ ಮತ್ತು ಅ.26ರಿಂದ ತಿಂಗಳ ಅಂತ್ಯದವೆರೆಗೆ ಇ-ಕೆವೈಸಿ ಪ್ರಕ್ರಿಯೆ ಮತ್ತು ಆಹಾರ ಧಾನ್ಯ ವಿತರಣೆಯನ್ನು ಜೊತೆಯಲ್ಲೇ ನಿರ್ವಹಿಸಲಾಗುವುದು.

ಕಾರ್ಡುದಾರರು ನಿಗದಿಪಡಿಸಿರುವ ಸಮಯದಲ್ಲಿ ಇ-ಕೆವೈಸಿಯನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News