ಮೀನುಗಾರರ ಸಾಲ ಮರುಪಾವತಿಗೆ ಬ್ಯಾಂಕುಗಳು ಒತ್ತಾಯಿಸುವಂತಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಸೆ.26: ಮೀನುಗಾರರ ಸಾಲ ಮನ್ನಾ ಯೋಜನೆಯಡಿಯಲ್ಲಿ 2017-18 ಮತ್ತು 2018-19ನೇ ಸಾಲಿನಲ್ಲಿ ಮೀನುಗಾರರಿಗೆ, ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಪ್ರಾದೇಶಿಕ ಬ್ಯಾಂಕುಗಳು ಶೇ.2, ಶೇ.3 ಹಾಗೂ ಶೂನ್ಯ ಬಡ್ಡಿದರದಲ್ಲಿ ವಿತರಿಸಿರುವ ಸಾಲಗಳು ಮನ್ನಾ ಆಗಲಿದ್ದು, ಹೀಗಾಗಿ ಆರ್ಹ ಫಲಾನುಭವಿಗಳಿಗೆ ಸಾಲ ಮರುಪಾವತಿಸುವಂತೆ ಬ್ಯಾಂಕ್ಗಳಿಂದ ಯಾವುದೇ ಒತ್ತಡ ಹೇರುವಂತಿಲ್ಲ ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಗುರುವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಮೀನುಗಾರರ ಸಾಲ ಮನ್ನಾ ಕುರಿತು ಅಧಿಕಾರಿಗಳು ಮತ್ತು ಮೀನುಗಾರಿಕಾ ಸಂಘಗಳ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, 2017-18 ಮತ್ತು 2018-19ನೇ ಸಾಲಿನಲ್ಲಿ ಮೀನುಗಾರರಿಗೆ ನೀಡಲಾದ 50,000ರೂ.ಸಾಲವನ್ನು ಮನ್ನಾ ಮಾಡಲಾಗುತ್ತಿದ್ದು, ಸಾಲ ಮರುಪಾವತಿಗಾಗಿ ಬ್ಯಾಂಕ್ಗಳಿಂದ ಒತ್ತಡ ಬರುತ್ತಿವೆ ಎಂದು ಮೀನುಗಾರರು ತಿಳಿಸಿದ್ದಾರೆ. ಹೀಗಾಗಿ ಈ ಬಗ್ಗೆ ಎಲ್ಲಾ ಬ್ಯಾಂಕ್ಗಳ ಅಧಿಕಾರಿಗಳಿಗೆ ತಿಳಿಸುವಂತೆ ಸಚಿವರ ಕೋಟ, ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗೆ ಸೂಚಿಸಿದರು.
ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್ ಮಾತನಾಡಿ, ಈ ಬಗ್ಗೆ ತಮಗೆ ಸಹ ದೂರು ಬಂದಿದ್ದು, ಮೀನುಗಾರರ ಸಾಲ ಮನ್ನಾ ಫಲಾನುಭವಿ ಗಳಿಗೆ ಸಾಲ ಪಾವತಿಸುವಂತೆ ಒತ್ತಡ ಹೇರದಂತೆ ಸಂಬಂದಪಟ್ಟ ಬ್ಯಾಂಕ್ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಲ್ಲದೇ ಸಾಲ ಮನ್ನಾ ಯೋಜನೆಯ ವ್ಯಾಪ್ತಿಗೆ ಬರುವ ಫಲಾನುಭವಿಗಳು ಎಪ್ರಿಲ್ 2019ರಿಂದ ಸಾಲ ಮರು ಪಾವತಿಸಿದಲ್ಲಿ ಈ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾ ಗುವುದು ಹಾಗೂ ಒಂದು ಕುಟುಂಬದಲ್ಲಿ ಒಬ್ಬ ಫಲಾನುಭವಿಗೆ ಮಾತ್ರ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯ. ಆದರೆ ಮೀನುಗಾರರು ಸಹಕಾರಿ ಸಂಘಗಳಿಂದ ಪಡೆದ ಸಾಲ ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದರು.
ಮೀನುಗಾರರಿಗೆ ಕೆಲವು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಮಾತ್ರ ಸಾಲ ನೀಡುತ್ತಿದ್ದು, ಎಲ್ಲಾ ಬ್ಯಾಂಕ್ಗಳಲ್ಲೂ ಸಾಲ ನೀಡುವಂತೆ ಮತ್ತು ಸಹಕಾರಿ ಸಂಘಗಳಿಂದ ಪಡೆದ ಸಾಲವನ್ನೂ ಸಹ ಮನ್ನಾ ಮಾಡುವಂತೆ, ಸಾಲಮನ್ನಾ ಕುರಿತ ಪ್ರಕ್ರಿಯೆಗಳನ್ನು ಶೀಘ್ರದಲ್ಲಿ ಮುಗಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಮೀನುಗಾರರ ಸಂಘಗಳ ಪದಾಧಿಕಾರಿಗಳು ಆಗ್ರಹಿಸಿದರು.
ಮೀನುಗಾರರಿಗೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲೂ ಸಾಲ ವಿತರಣೆ ಕುರಿತಂತೆ ಎಲ್ಲಾ ಬ್ಯಾಂಕ್ಗಳಿಗೆ ಸೂಚನೆ ನೀಡುವುದಾಗಿ ಮತ್ತು ಸಾಲ ಮನ್ನಾ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸುವುದಾಗಿ ತಿಳಿಸಿದ ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್, ಸಮಸ್ಯೆಗಳಿದ್ದಲ್ಲಿ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಿಳಿಸಿದರು.
ಮೀನುಗಾರರಿಗೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲೂ ಸಾಲ ವಿತರಣೆ ಕುರಿತಂತೆ ಎಲ್ಲಾ ಬ್ಯಾಂಕ್ಗಳಿಗೆ ಸೂಚನೆ ನೀಡುವುದಾಗಿ ಮತ್ತು ಸಾಲ ಮನ್ನಾ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸುವುದಾಗಿ ತಿಳಿಸಿದ ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್, ಸಮಸ್ಯೆಗಳಿದ್ದಲ್ಲಿ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಿಳಿಸಿದರು. ಮೀನುಗಾರರ ವಿವಿಧ ಸಮಸ್ಯೆಗಳ ಕುರಿತಂತೆ 2 ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವ ಪೂಜಾರಿ ಹೇಳಿದರು. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಸಂಘದ ಅಧ್ಯಕ್ಷ ಯಶ್ಪಾಲ್ ಸುವರ್ಣ ಸ್ವಾಗತಿಸಿದರು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಜಿ. ಜಗದೀಶ್, ಮೀನುಗಾರಿಕಾ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್, ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಗಣೇಶ್, ಪಾರ್ಶ್ವನಾಥ್, ಸಹಕಾರ ಇಲಾಖೆಯ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.