ಕೇಂದ್ರ ಸರಕಾರದ ವಿರುದ್ಧ ನಾಳೆ ಉತ್ತರ ಕರ್ನಾಟಕ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು, ಅ.2: ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ-ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಆರೋಪಿಸಿದ್ದಾರೆ.
ಆದರೆ, ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ, ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸುತ್ತದೆ. ಈ ಧೋರಣೆ ವಿರೋಧಿಸಿ ಅ.3ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಂದು ಮುಂಜಾನೆ 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಫ್ರೀಡಂ ಪಾರ್ಕ್ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ ಎಂದು ಶಿವಕುಮಾರ್ ಮೇಟಿ ತಿಳಿಸಿದ್ದಾರೆ.
ನೆರೆ ಸಂತ್ರಸ್ತರಿಗಾಗಿ ಮಿಡಿಯುವ ಎಲ್ಲ ಹೃದಯಗಳಿಗೆ ಸ್ವಾಗತ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.