ನೆರೆ ಸಂತ್ರಸ್ತರಿಗೆ ರಾಜ್ಯ ಸರಕಾರ ಬಿಡಿಗಾಸೂ ಬಿಡುಗಡೆ ಮಾಡಿಲ್ಲ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಅ.10: ನೆರೆ ಸಂತ್ರಸ್ತರಿಗೆ ಇದುವರೆಗೂ ರಾಜ್ಯದ ಬಿಜೆಪಿ ಸರಕಾರ ಬಿಡಿಗಾಸೂ ಸಹ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಗುರುವಾರ ನಗರದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು, ಮೌರ್ಯ ವೃತ್ತದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ನೆರೆ ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ. ಆದರೆ, ಅವರ ನೆರವಿಗೆ ಇದುವರೆಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಧಾವಿಸಿಲ್ಲ. ಒಂದು ರೂಪಾಯಿಯೂ ಸಹ ಪರಿಹಾರ ಸಂತ್ರಸ್ತರಿಗೆ ದಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನೆರೆ ಸಂತ್ರಸ್ತರ ರಕ್ಷಣೆಗೆ ಹೋಗದ ಸರಕಾರದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದ ಅವರು, ಮನೆ ಕಳೆದುಕೊಂಡವರಿಗೆ ಮನೆ ಕಟ್ಟು ಕೊಡುವುದಾಗಿ ಹೇಳಿದ್ದಾರೆ. 5 ಲಕ್ಷ ಹಣ ನೀಡುತ್ತೇವೆಂದು ಹೇಳಿದ್ದಾರೆ. ಆದರೆ, ಈವರೆಗೂ ನೀಡಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು.