ಕಾಮಗಾರಿ ನಕಲು ಆಗದಂತೆ ಎಚ್ಚರಿಕೆ ವಹಿಸಿ: ಸಮಾಜ ಕಲ್ಯಾಣ ಇಲಾಖೆ ಪ್ರ.ಕಾರ್ಯದರ್ಶಿ ಕುಮಾರ ನಾಯಕ

Update: 2019-10-19 17:32 GMT

ಬೆಳಗಾವಿ, ಅ.19: ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಕಾಲನಿ ಕಾಮಗಾರಿಗಳು ಮತ್ತು ಎಸ್ಸಿಪಿ-ಟಿಎಸ್ಪಿ ಕಾಮಗಾರಿಗಳು ನಕಲು ಅಥವಾ ಅತಿಕ್ರಮವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ ನಾಯಕ ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಯೋಜನೆಗಳು ಮತ್ತು ವಿವಿಧ ಇಲಾಖೆಗಳ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಗತಿ ಕಾಲನಿ ಕಾಮಗಾರಿಗಳಿಗೆ ಈ ವರ್ಷ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು. ಆದ್ದರಿಂದ ಈಗಾಗಲೇ ಅನುಮೋದನೆ ನೀಡಲಾಗಿರುವ ಕೆಲಸವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅದೇ ರೀತಿ ಅಂಬೇಡ್ಕರ್, ವಾಲ್ಮೀಕಿ ಮತ್ತಿತರ ಭವನಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.

ಎಲ್ಲ ಭವನಗಳು ಸರಕಾರದ ಆಸ್ತಿ ಆಗಿರುವುದರಿಂದ ಲಭ್ಯತೆ ಆಧರಿಸಿ ಇತರೆ ಯಾವುದೇ ಸಮುದಾಯದವರು ಅದನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ನಿರಂತರ ಪ್ರಗತಿ ಪರಿಶೀಲನೆ ಅಗತ್ಯವಿದೆ ಎಂದು ಅವರು ಹೇಳಿದರು.

ಲೋಕೋಪಯೋಗಿ ಇಲಾಖೆಯ ರಸ್ತೆಗಳ ನಿರ್ಮಾಣಕ್ಕೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದ ಬಳಕೆ ಮಾಡುವಂತಿಲ್ಲ. ಅನುದಾನ ನಿಗದಿಪಡಿಸಿದ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕುಮಾರ ನಾಯಕ ಸೂಚನೆ ನೀಡಿದರು.

ಜಿಯೋಟ್ಯಾಗ್ ಅಥವಾ ವಿವಿಧ ಇಲಾಖೆಗಳ ಯೋಜನೆಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದರೆ ಕಾಮಗಾರಿಗಳ ನಕಲು ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಹೇಳಿದರು.

ನಿಗದಿಪಡಿಸಿದ ಉದ್ದೇಶಕ್ಕೆ ಅನುದಾನ ಬಳಸಿಕೊಳ್ಳಲು ಹಾಗೂ ಬೇರೆ ಬೇರೆ ಯೋಜನೆ ಅಡಿ ಒಂದೇ ಕಾಮಗಾರಿ ಕೈಗೊಳ್ಳುವುದನ್ನು ತಡೆಗಟ್ಟಲು ಇದರಿಂದ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ವಸತಿ ನಿಲಯ ಪ್ರಸ್ತಾವ ಸಲ್ಲಿಸಲು ಸೂಚನೆ: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಹಾಗೂ ವಿವಿಧ ಇಲಾಖೆಗಳ ವಸತಿ ನಿಲಯಗಳನ್ನು ಸ್ಥಾಪಿಸುವಾಗ ಮಕ್ಕಳ ಸಂಖ್ಯೆಯನ್ನು ಗಮನದಲ್ಲಿರಿಸಿಕೊಂಡು ರಸ್ತೆ, ನೀರು ಮತ್ತಿತರ ಸೂಕ್ತ ಮೂಲಸೌಕರ್ಯಗಳನ್ನು ಹೊಂದಿರುವ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸಬೇಕು ಎಂದು ಕುಮಾರ ನಾಯಕ ಸೂಚನೆ ನೀಡಿದರು.

ರಸ್ತೆ ಸಂಪರ್ಕ, ನೀರಿನ ಸೌಲಭ್ಯ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಪರಿಗಣಿಸಿ ಶೈಕ್ಷಣಿಕ ಸಂಸ್ಥೆಗಳ ಸಮೀಪ ಇರುವ ಜಾಗವನ್ನು ಗುರುತಿಸಬೇಕು. ಮಕ್ಕಳ ಸಂಖ್ಯೆ ಆಧರಿಸಿ ಸೂಕ್ತ ಅಂಕಿ-ಅಂಶಗಳ ಸಮೇತ ಪ್ರಸ್ತಾವ ಸಲ್ಲಿಸಿದರೆ ಹೆಚ್ಚಿನ ವಸತಿ ನಿಲಯಗಳ ಮಂಜೂರಾತಿಗೆ ಸುಲಭವಾಗುತ್ತದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಅಥವಾ ಹೆಚ್ಚು ಆದಾಗ ಅನಿವಾರ್ಯತೆ ಇದ್ದರೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ಇನ್ನೂ ಹೆಚ್ಚಿನ ವಸತಿ ನಿಲಯಗಳ ಸ್ಥಾಪನೆಗೆ ಮಂಜೂರಾತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿದರು.

ಯಾವುದೇ ಕಾಮಗಾರಿಗೆ ಸಂಬಂಧಿಸಿದಂತೆ ಶಾಸಕರು ಪ್ರಸ್ತಾವ ಸಲ್ಲಿಸಿದಾಗ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಕೈಗೊಂಡಾಗ ಮಾತ್ರ ಸಾರ್ಥಕವಾಗುತ್ತದೆ. ಪ್ರಧಾನಮಂತ್ರಿ ಆದರ್ಶ ಗ್ರಾಮವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲೆಯ 20 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಗ್ರಾಮ ಮಟ್ಟದಲ್ಲಿ ಕ್ರಿಯಾಯೋಜನೆ ರೂಪಿಸಿಕೊಂಡು ಕಾಮಗಾರಿಯನ್ನು ಕೈಗೊಳ್ಳಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ತಿಳಿಸಿದರು.

ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ, ಪಂಚಾಯತರಾಜ್ ಎಂಜಿನಿಯರಿಂಗ್, ನೀರಾವರಿ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ ಕುಮಾರ ನಾಯಕ, ಕಾಲಮಿತಿಯಲ್ಲಿ ಗುರಿಯನ್ನು ಸಾಧಿಸುವಂತೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಂಬೇಡ್ಕರ್ ಅಭಿವೃದ್ಧಿ ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಹರಗಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News