ಸರಕಾರ ನಡೆಸಲು ಯಡಿಯೂರಪ್ಪಗೆ ಸಾಮರ್ಥ್ಯವಿಲ್ಲ: ದಿನೇಶ್ ಗುಂಡೂರಾವ್

Update: 2019-10-23 12:07 GMT

ಬೆಂಗಳೂರು, ಅ.23: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರಕಾರ ನಡೆಸುವ ಸಾಮರ್ಥ್ಯ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಬುಧವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವವನ್ನು ಕೇಂದ್ರದ ಬಿಜೆಪಿ ನಾಯಕರು ಒಪ್ಪಿಕೊಂಡಿಲ್ಲ. ಹಾಗಾಗಿಯೇ ಅವರು ಹೆಚ್ಚಿನ ಮೊತ್ತದ ಪರಿಹಾರಕ್ಕೆ ಬೇಡಿಕೆಯಿಟ್ಟರೂ, ಬಿಡುಗಡೆ ಮಾಡಿಲ್ಲ. ಇದರಿಂದ ಅವರ ಸಾಮರ್ಥ್ಯ ಬಹಿರಂಗವಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ನೀಡಿರುವ ಪರಿಹಾರ ಮೊತ್ತದಲ್ಲಿ ‘ನೀರಿನಲ್ಲಿ ಹೋಮ’ ಮಾಡಲು ಸಾಧ್ಯ ಎಂದು ವ್ಯಂಗ್ಯವಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಸೇರಿದಂತೆ ವಿದೇಶಿ ಪ್ರವಾಸ ಕೈಗೊಳ್ಳುತ್ತಾರೆ. ಆದರೆ, ದೇಶದಲ್ಲಿರುವ ಕರ್ನಾಟಕಕ್ಕೆ ಒಮ್ಮೆಯೂ ಭೇಟಿ ನೀಡಿ, ಸಂತ್ರಸ್ತರ ನೋವಿನ ಬಗ್ಗೆ ಗಮನ ಹರಿಸಿಲ್ಲ ಎಂದರು.

70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಅನೇಕರು ಪ್ರಶ್ನೆ ಮಾಡುತ್ತಾರೆ. ಆದರೆ, ಕಾಂಗ್ರೆಸ್ ಈ ದೇಶವನ್ನು ಛಿದ್ರವಾಗದಂತೆ ನೋಡಿಕೊಂಡಿದೆ. ಅಷ್ಟೇ ಅಲ್ಲದೆ, ಆರ್ಥಿಕ, ಸಾಮಾಜಿಕ ಸಾಧಾರಣೆಗೆ ಬಹುದೊಡ್ಡ ಕೊಡುಗೆ ನೀಡಿದೆ. ಇದನ್ನು ಒಮ್ಮೆ ತಿಳಿದುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ಬಗ್ಗೆ ಪ್ರಶ್ನೆ ಮಾಡುವಂತೆ ಆಗಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News