ಕುಮಾರಸ್ವಾಮಿ, ಸಿದ್ದರಾಮಯ್ಯ ನಿದ್ದೆಯಲ್ಲೂ 'ಕುರ್ಚಿ'ಗಾಗಿ ಚಡಪಡಿಸುತ್ತಿದ್ದಾರೆ: ಸಚಿವ ಈಶ್ವರಪ್ಪ

Update: 2019-10-25 18:30 GMT

ಮಡಿಕೇರಿ, ಅ.25: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಖುರ್ಚಿ ಕಳೆದುಕೊಂಡು ನಿದ್ದೆಯಲ್ಲೂ ಕುರ್ಚಿಗಾಗಿ ಚಡಪಡಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಸರಕಾರದ ವಿರುದ್ದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ, ರಾಜ್ಯ ಬಿಜೆಪಿ ಸರಕಾರದ ಆಡಳಿತದಲ್ಲಿ ಕೇಂದ್ರ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಕುರಿತು ಅವರು ಸ್ಪಷ್ಟಪಡಿಸಿದರು. ಬಿಜೆಪಿಯ ಎಲ್ಲಾ ಸಚಿವರು ತಮ್ಮ ಹುದ್ದೆಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿದ್ದಾರೆ, ನಮ್ಮ ಹಿಂದೆ ಜನರು ಮಾತ್ರವೇ ಇದ್ದಾರೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ಕುರ್ಚಿ ಕಳೆದುಕೊಂಡ ಹಿನ್ನೆಲೆಯಲ್ಲಿ ಅವರಿಗೆ ನಿದ್ದೆ ಬರುತ್ತಿಲ್ಲ. ಅದಕ್ಕಾಗಿ ಇಂತಹ ಆಪಾದನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರ ಸರಿಯಾಗಿ ಅಧಿಕಾರ ನಡೆಸಿಲ್ಲ ಎನ್ನುವ ಕಾರಣಕ್ಕಾಗಿ ಆ ಪಕ್ಷಗಳ ಶಾಸಕರು ರಾಜೀನಾಮೆ ನೀಡಿದ್ದಾರೆ. ಅದರಿಂದಾಗಿ ನಮಗೆ ಬಹುಮತ ಬಂದಿದೆ, ಇಲ್ಲದಿದ್ದಲ್ಲಿ ನಾವ್ಯಾರು ಮಂತ್ರಿಗಳಾಗುತ್ತಿರಲಿಲ್ಲ. ಸಂಕಷ್ಟದಲ್ಲಿ ಆ ಶಾಸಕರು ಸಹಕಾರ ನೀಡಿದ್ದಾರೆ, ಅವರಿಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಅವರಿಗೆ ತೃಪ್ತಿಯಾಗುವ ರೀತಿಯಲ್ಲಿ ಸಹಕಾರ ನೀಡಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮಹಾರಾಷ್ಟ್ರ ಹಾಗೂ ಹರ್ಯಾಣ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ವರ್ಚಸ್ಸು ಕಡಿಮೆಯಾಗುತ್ತಿದೆ ಎನ್ನುವ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್‍ನಲ್ಲಿ ರಾಹುಲ್ ಗಾಂಧಿ ಅವರನ್ನು ಬಿಟ್ಟರೆ ಸಿದ್ದರಾಮಯ್ಯ ಅವರೇ ರಾಷ್ಟ್ರೀಯ ಅಧ್ಯಕ್ಷರಾ?. ಹಾಗಿದ್ದರೆ ಅವರೇ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಪ್ರಚಾರಕ್ಕೆ ಹೋಗಬೇಕಿತ್ತು. ಒಂದು ಸಮರ್ಥ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು ಆಗದ ಇವರಿಗೆಲ್ಲ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಯಾವ ಯೋಗ್ಯತೆ, ಅಧಿಕಾರವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭಾಧ್ಯಕ್ಷರಿಗೇ ಏಕ ವಚನದಲ್ಲಿ ಮಾತನಾಡುತ್ತಾರೆ, ಆ ಪೀಠದ ಬಗ್ಗೆ ಅಗೌರವ ತೋರಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಅವರು ಹೇಗೆಲ್ಲಾ ಮಾತನಾಡುತ್ತಾರೆ. ಇವರಿಗೆ ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆಯಾ ಎನ್ನುವ ಪ್ರಶ್ನೆಗಳು ಎಲ್ಲರಿಗೂ ಮೂಡುತ್ತದೆ ಎಂದು ಟೀಕಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News