ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಲ್ಲಿಸಿದ ಆಡಿಯೋಗೆ ಮನ್ನಣೆ
ಹೊಸದಿಲ್ಲಿ, ನ.5: ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಯ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಗೆ ನೀಡಿದೆ.
ಅನರ್ಹ ಶಾಸಕರ ವಿಚಾರಣೆ ವೇಳೆ ನ್ಯಾಯಮೂರ್ತಿ ರಮಣ್ ನೇತೃತ್ವದ ತ್ರಿ ಸದಸ್ಯ ನ್ಯಾಯ ಪೀಠದ ಮುಂದೆ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ ಶಾಸಕರ ರಾಜೀನಾಮೆ ಹಿಂದೆ ಕೇಂದ್ರ ಗೃಹ ಸಚಿವರು ಇದ್ದಾರೆಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಹಾಜರುಪಡಿಸಿದರು.
ಬಿಜೆಪಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿದೆ ಇದನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸುವಂತೆ ಕಪಿಲ್ ಸಿಬಲ್ ಮನವಿ ಮಾಡಿದರು. ಇದಕ್ಕೆ ಬಿಎಸ್ ವೈ ಪರ ವಕೀಲ ಸುಂದರಂ ಆಕ್ಷೇಪ ವ್ಯಕ್ತಪಡಿಸಿದರು. ಜೆಡಿಎಸ್ ಪರ ವಕೀಲ ಧವನ್ ಆಡಿಯೋವನ್ನು ಪರಿಶೀಲಿಸುವಂತೆ ಮನವಿ ಮಾಡಿದರು.
'ಕರ್ನಾಟಕದ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಆರೋಪಗಳನ್ನು ದಾಖಲಿಸಲು ಕಪಿಲ್ ಸಿಬಲ್ ಮಾಡಿರುವ ಮನವಿಯನ್ನು ನಾವು ಪರಿಗಣಿಸುತ್ತೇವೆ ಎಂದು ತ್ರಿಸದಸ್ಯ ಪೀಠ ಹೇಳಿದೆ.
ಕಳೆದ ಅಕ್ಟೋಬರ್ 26ರಂದು ಹುಬ್ಬಳ್ಳಿಯ ಹೋಟೆಲ್ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮುಖ್ಯ ಮಂತ್ರಿ ಆಡಿದ ಮಾತುಗಳಿರುವ ಆಡಿಯೊ ಮತ್ತು ವಿಡಿಯೊ ಸದ್ದು ಮಾಡಿದ್ದು, ಈ ಆಸ್ತ್ರವನ್ನು ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ಪ್ರಯೋಗಿಸಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಕಂಟಕ ಎದುರಾಗುವ ಸಾಧ್ಯತೆ ಕಂಡು ಬಂದಿದೆ