ಉಡುಪಿ: ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ಗೆ ಚಾಲನೆ
ಉಡುಪಿ, ನ. 6: ಮಕ್ಕಳ ಹಕ್ಕುಗಳು ಹಾಗೂ ಅದರ ಬಳಕೆ ಕುರಿತು ತಿಳಿದು ಕೊಳ್ಳುವುದು ಪ್ರತಿಯೊಬ್ಬ ಪೋಷಕರು ಹಾಗೂ ಮಕ್ಕಳ ಕರ್ತವ್ಯವಾಗಿದೆ ಎಂದು ಉಡುಪಿ ಜಿಪಂ ಉಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಹೇಳಿದ್ದಾರೆ.
ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಮಂಗಳೂರು ಪಡಿ ಸಂಸ್ಥೆ, ಜಿಲ್ಲಾ ಎಸ್ಡಿಎಂಸಿ ಸಮನ್ವಯ ವೇದಿಕೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸಂತೆಕಟ್ಟೆ ಲಯನ್ಸ್ ಕ್ಲಬ್, ಉಡುಪಿ ಲಿಯೋ ಕ್ಲಬ್ ಹಾಗೂ ಸ್ವಚ್ಛ ಭಾರತ್ ಫ್ರೆಂಡ್ಸ್ ಉಡುಪಿ, ಜೆಸಿಐ ಉಡುಪಿ ಸಿಟಿ ಇವರಸಂಯುಕ್ತಾಶ್ರಯದಲ್ಲಿ ಬುಧವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಪೋಷಕರು, ಶಿಕ್ಷಕರ ಪಾತ್ರ ಅತಿ ಮುಖ್ಯ ವಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಮಕ್ಕಳ ಹಕ್ಕುಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಮಕ್ಕಳ ಹಕ್ಕುಗಳ ಸಂಸತ್ ಸಹಕಾರಿಯಾಗಿದ್ದು, ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಲು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿವಾಕರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಮೃತ್ ಶೆಣೈ, ಉಡುಪಿ ಜಿಲ್ಲೆ ಲಿಯೋ ಕ್ಲಬ್ ಅಧ್ಯಕ್ಷ ಫೌಜಾನ್ ಅಕ್ರಂ, ಜಿಲ್ಲಾ ಸಂಯೋಜಕ ಮಹಮ್ಮದ್, ಸಂತೆಕಟ್ಟೆ ಲಯನ್ಸ್ ಕ್ಲಬ್ ರಾಜೇಶ್ ಎಸ್., ಸ್ವಚ್ಛ ಭಾರತ ಫ್ರೆಂಡ್ಸ್ ಸ್ಥಾಪಕ ಗಣೇಶ್ ಪ್ರಸಾದ್ ಜಿ. ನಾಯಕ್, ಜೆಸಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಪ್ರಭು ಕರ್ವಾಲು, ಎಸ್ಡಿಎಂಸಿ ಉಷಾ ರಮೇಶ್ ಉಪಸ್ಥಿತರಿದ್ದರು.
ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷ ತಿಲೋತ್ತಮೆ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾಕರ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.