ಕಾಂಗ್ರೆಸ್ ಒಳಸಂಚಿನಿಂದ ಬಿಜೆಪಿ ಅಧಿಕಾರಕ್ಕೆ: ಕುಮಾರಸ್ವಾಮಿ

Update: 2019-11-18 12:54 GMT

ಬೆಂಗಳೂರು, ನ. 18: ಕಾಂಗ್ರೆಸ್ ಪಕ್ಷದ ಒಳಸಂಚಿನಿಂದಲೇ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಶಿವಾಜಿನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ತನ್ವೀರ್ ಅಹಮ್ಮದ್ ಉಲ್ಲಾ ನಾಮಪತ್ರ ಸಲ್ಲಿಕೆ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜೆಡಿಎಸ್ ವಿರುದ್ದ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದು, ಬಿಜೆಪಿಯ ಬಿ-ಟೀಮ್ ಎಂದು ಹೇಳುತ್ತಿದ್ದಾರೆ. ಆದರೆ, ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಬಡ ಜನರಿಗೆ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ವಂಚಿಸಿದ ಪ್ರಕರಣದಲ್ಲಿ ಜನರ ಹಣ ಹಿಂದಿರುಗಿಸಲು ನಾನು ಕ್ರಮ ಕೈಗೊಂಡಿದ್ದೆ. ಬಡವರಿಗೆ ಅವರ ಹಣ ಅವರಿಗೆ ತಲುಪವವರೆಗೂ ನಾನು ಜನರೊಂದಿಗೆ ಇರುತ್ತೇನೆ ಎಂದು ಕುಮಾರಸ್ವಾಮಿ, ಐಎಂಎ ಪ್ರಕರಣವನ್ನು ಪರೋಕ್ಷವಾಗಿ ಉಲ್ಲೇಖಿಸಿದರು.

ಉಪ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದ ಜನತೆ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಕೋರಿದ ಅವರು, ನಮ್ಮನ್ನು ಉಳಿಸುವ ಜವಾಬ್ದಾರಿ ನಿಮ್ಮ ಮೇಲಿದ್ದು, ನಮಗೆ ಶಕ್ತಿ ನೀಡಬೇಕು ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News