ಕೆಪಿಎಸ್ಸಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ

Update: 2019-11-20 15:14 GMT

ಬೆಂಗಳೂರು, ನ. 20: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಮೂಲಕ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 'ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್‌(ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ) ತಿದ್ದುಪಡಿ ನಿಯಮಗಳು- 2019ಕ್ಕೆ' ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬುಧವಾರ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದ್ದು, ಕೆಎಎಸ್ ಹುದ್ದೆಗಳ ನೇಮಕಾತಿ ವೇಳೆ ಲಿಖಿತ ಪರೀಕ್ಷೆಯ ನಂತರ ಅರ್ಹ ಅಭ್ಯರ್ಥಿಗಳಲ್ಲಿ ಸಂದರ್ಶನಕ್ಕೆ 1:3ರ ಅನುಪಾತದಲ್ಲೆ ಅಭ್ಯರ್ಥಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ನಿಯಮಗಳಿಗೆ ತಿದ್ದುಪಡಿಗೆ ಸಂಪುಟ ನಿರ್ಧರಿಸಿದೆ ಎಂದು ಗೊತ್ತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕುಮಾರಧಾರ ನದಿಗೆ ಅಡ್ಡಲಾಗಿ ಶಾಂತಿ ಮೋಗೆರು ಎಂಬಲ್ಲಿ ಸೇತುವೆ ಮತ್ತು ಅಪ್ರೋಚ್ ರಸ್ತೆ ನಿರ್ಮಾಣ ಕಾಮಗಾರಿಗೆ 13.54 ಕೋಟಿ ರೂ..ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ ಆಡಳಿತ ನ್ಯಾಯಮಂಡಳಿ (ನೇಮಕಾತಿ) (ತಿದ್ದುಪಡಿ) ನಿಯಮ, 2019ಕ್ಕೂ ಸಂಪುಟ ಒಪ್ಪಿಗೆ ನೀಡಿದೆ. ಇಂಧನ ಸಂರಕ್ಷಣಾ ಕಟ್ಟಡ ಸಂಹಿತೆ 2018ಕ್ಕೆ ಸಮ್ಮತಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ (ಹಿರಿಯ ವೈದ್ಯಾಧಿಕಾರಿಗಳು ಮತ್ತು ದಂತ ವೈದ್ಯಾಧಿಕಾರಿಗಳ ನೇಮಕಾತಿ) (ವಿಶೇಷ) ನಿಯಮಕ್ಕೆ ಸಂಪುಟ ಅನುಮೋದನೆ ನೀಡಿದೆ.

ಎಸ್ಸಿ-ಎಸ್ಟಿ ವರ್ಗದ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳ 8 ಸಂಕೀರ್ಣ ಕಟ್ಟಡಗಳನ್ನು 215 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು 15 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಹಾಗೂ ಕೆಎಚ್‌ಬಿಯಿಂದ ಮೂರು ಎಕರೆ ಜಾಗವನ್ನು ನೀಡಲು ಸಚಿವ ಸಂಪುಟ ಸಭೆ ಸಮ್ಮತಿಸಿದೆ ಎಂದು ತಿಳಿದು ಬಂದಿದೆ.

ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಗೆ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ರೋಬಾಟಿಕ್ ಶಸ್ತ್ರ ಚಿಕಿತ್ಸಾ ವಿಭಾಗ ಆರಂಭಿಸಲು ಸರಕಾರ ಒಪ್ಪಿಗೆ ನೀಡಿದೆ. ಮೂಳೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸರಕಾರಿ ವಲಯದ ಆಸ್ಪತ್ರೆಗಳಲ್ಲಿ ರೋಬಾಟಿಕ್ ಶಸ್ತ್ರಚಿಕಿತ್ಸೆ ವಿಭಾಗವನ್ನು ಸ್ಥಾಪಿಸುತ್ತಿರುವುದು ಇದೇ ಮೊದಲು. ಈ ತಂತ್ರಜ್ಞಾನದ ಮೂಲಕ ಅತ್ಯಂತ ನಿಖರವಾಗಿ ಮೂಳೆ ಶಸ್ತ್ರಚಿಕಿತ್ಸೆ ನಡೆಸಬಹುದಾಗಿದೆ. ರೋಗಿಗಳಿಗೆ ಅತಿ ಕಡಿಮೆ ವೆಚ್ಚಲ್ಲಿ ಶಸ್ತ್ರ ಚಿಕಿತ್ಸೆ ಮಾಡಬಹುದಾಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 55.56 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಸೌಲಭ್ಯವುಳ್ಳ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನೂತನ ಶಾಖೆ ಸ್ಥಾಪಿಸಲಾಗುವುದು. ಇದಕ್ಕೆ ಪುಟ್ಟರಾಜ ಗವಾಯಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಕೇಂದ್ರ ಎಂದು ಹೆಸರಿಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News