'ಅನಾಥ ರೋಗಿಗಳ ಆರೈಕೆಗೆ ಉಡುಪಿ ಜಿಲ್ಲೆಯಲ್ಲಿ ಅನಾಥಾಶ್ರಮ'
ಉಡುಪಿ, ನ.29: ಜಿಲ್ಲೆಯ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದಲ್ಲಿ ಅನಾಥಾಲಯ ಆರಂಭಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲಾ ಆಸ್ಪತ್ರೆಗೆ ಸಮಾಜಸೇವಕರು ಮತ್ತು ಸಾರ್ವಜನಿಕರು ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಇವರ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಸಭೆಯ ಗಮನ ಸೆಳೆದರು. ಈ ಕುರಿತಂತೆ ಅನಾಥ ರೋಗಿಗಳ ಆರೈಕೆಗಾಗಿ ಜಿಲ್ಲೆಯಲ್ಲಿ ಅನಾಥಾಲಯ ಆರಂಭಿಸುವಂತೆ ಮತ್ತು ಜಿಲ್ಲಾಸ್ಪತ್ರೆ ಯಿಂದ ಸೂಚಿಸುವ ಅನಾಥ ರೋಗಿಗಳನ್ನು ಇಲ್ಲಿ ಕಡ್ಡಾಯವಾಗಿ ದಾಖಲು ಮಾಡಿಕೊಳ್ಳುವಂತೆ ತಿಳಿಸಿದ ಮಹೇಶ್ವರ ರಾವ್, ಈ ಅನಾಥಾಲಯಕ್ಕೆ ಜಿಲ್ಲಾ ಖನಿಜ ನಿಧಿಯಿಂದ ಕೂಡ ಅಗತ್ಯ ಆರ್ಥಿಕ ನೆರವು ನೀಡುವಂತೆ ಜಿಲ್ಲಾಧಿಕಾರಿ ಗಳಿಗೆ ತಿಳಿಸಿದರು.
ಉಡುಪಿ ಜಿಲ್ಲಾಸ್ಪತ್ರೆ ಇದುವರೆಗೂ ತಾಲೂಕು ಆಸ್ಪತ್ರೆ ಮಾದರಿಯಲ್ಲಿಯೇ ಇದ್ದು, ಇದನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಕೋರಿದರು. ಈ ಕುರಿತಂತೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ ಮಹೇಶ್ವರ ರಾವ್, ಪ್ರಸ್ತುತ ಆಸ್ಪತ್ರೆಯಲ್ಲಿ ದಾಖಲಾಗುತ್ತಿರುವ ಒಳರೋಗಿಗಳ ಸಂಖ್ಯೆ, ಚಿಕಿತ್ಸೆಗೆ ಆಗಮಿಸುತ್ತಿರುವ ಹೊರರೋಗಿಗಳ ಸಂಖ್ಯೆ ಕುರಿತಂತೆ ವಿವರಗಳನ್ನು ನೀಡುವಂತೆ ಜಿಲ್ಲಾ ಸರ್ಜನ್ಗೆ ಸೂಚಿಸಿದರಲ್ಲದೇ, ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸು ವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಡೆಂಗ್, ಮಲೇರಿಯಾ ಮುಂತಾದ ರೋಗಗಳ ಹರಡುವಿಕೆ ಕುರಿತಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಶಾಲಾ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಜಿಲ್ಲೆಯ ಎಲ್ಲಾ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ಖರೀದಿಸಿರುವ ಉಪಕರಣಗಳು ಸಮರ್ಪಕವಾಗಿ ಬಳಕೆಯಾಗುತ್ತಿರುವ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
ಜಿಲ್ಲೆಯ ಅಂಗನವಾಡಿಗಳಲ್ಲಿ ಎಲ್ಲಾ ಸೌಕರ್ಯಗಳು ಇರುವ ಬಗ್ಗೆ ಹಾಗೂ ಅವುಗಳ ಸಮರ್ಪಕ ಕಾರ್ಯನಿರ್ವಹಣೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ, ವಾರದಲ್ಲಿ ಒಂದು ದಿನ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಅಂಗನವಾಡಿ ಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿ ನೀಡುವ ಆಹಾರದ ಗುಣಮಟ್ಟ, ನೈರ್ಮಲ್ಯ ಮುಂತಾದವುಗಳ ಕುರಿತು ವರದಿ ನೀಡುವಂತೆ ಮಹೇಶ್ವರ ರಾವ್ ಸೂಚಿಸಿದರು.
ತಪಾಸಣೆ ವೇಳೆ ಪರಿಶೀಲಿಸಬೇಕಾದ ಅಂಶಗಳ ಕುರಿತ ಚೆಕ್ಲಿಸ್ಟ್ ಸಿದ್ದಪಡಿಸಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾಧಿಕಾರಿ ಗ್ರೇಸಿ ಗೊನ್ಸಾಲ್ವಿಸ್ ಅವರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಯಾವುದೇ ಗರ್ಭಿಣಿ ಮತ್ತು ಮಗು ಅಪೌಷ್ಠಿಕತೆಯಿಂದ ಬಳಲದಂತೆ ಕಾರ್ಯನಿರ್ವಹಿಸುವಂತೆ ಅವರು ಕಿವಿಮಾತು ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಕುರಿತಂತೆ, ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿಯ ಫ್ಲೈಓವರ್ ಮತ್ತು ಕೋಟೇಶ್ವರ ಅಂಡರ್ ಪಾಸ್ ಕಾಮಗಾರಿ ವಿಳಂಬ ಕುರಿತು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಕಾರ್ಯದರ್ಶಿಗಳು, ಜಿಲ್ಲೆಯಲ್ಲಿ ಪಾಸ್ಟ್ಟ್ಯಾಗ್ಗಳು ನಿಗದಿತ ಪ್ರಮಾಣದಲ್ಲಿ ದೊರೆಯದ ಕುರಿತು ಸಹ ಚರ್ಚಿಸುವುದಾಗಿ ನುಡಿದರು.
ಮೀನುಗಾರಿಕೆ: ಮೀನುಗಾರಿಕೆ ಇಲಾಖೆಗೆ ಸಂಬಂದಿಸಿದಂತೆ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸಾಮರ್ಥ್ಯದ ಇಂಜಿನ್ ಅಳವಡಿಕೆ, ಜಿಲ್ಲೆಯಲ್ಲಿ, ಸಣ್ಣ ಮೀನು ಹಿಡಿಯುವಿಕೆ, ಬೆಳಕು ಮೀನುಗಾರಿಕೆ, ಬುಲ್ ಟ್ರಾಲಿಂಗ್ ಸೇರಿದಂತೆ ಎಲ್ಲಾ ರೀತಿಯ ಕಾನೂನುಬಾಹಿರ ಮೀನುಗಾರಿಕೆ ತಡೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಹೇಶ್ವರ ರಾವ್ ಜಿಲ್ಲಾಧಿಕಾರಿ ಜಿ.ಜಗದೀಶ್ಗೆ ಸೂಚನೆಗಳನ್ನು ನೀಡಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದ ಕಾರ್ಯದರ್ಶಿಗಳು, ಜಿಲ್ಲೆಯ ಕನಿಷ್ಠ 50 ಗ್ರಾಮಗಳಲ್ಲಿ ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸುವಂತೆ ಮತ್ತು ಪ್ರಾಕೃತಿಕ ವಿಕೋಪದಿಂದ ಹಾನಿಯಾದ ರಸ್ತೆ ಮತ್ತು ಕಟ್ಟಡಗಳ ದುರಸ್ತಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸುವಂತೆ ಸೂಚಿಸಿದರು.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತ ಮ ಸಾಧನೆ ತೋರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಟಿಇಟಿ ಪರೀಕ್ಷೆ ಕುರಿತಂತೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಿಡಿಪಿಐಗೆ ಸೂಚಿಸಿದ ಮಹೇಶ್ವರ ರಾವ್, ಜಿಲ್ಲೆಯಲ್ಲಿ ಆರಂಭಿಸಿರುವ ಅಟಲ್ ಟಿಂಕರ್ ಲ್ಯಾಬ್ಗಳ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಎಎಸ್ಪಿಕುಮಾರಚಂದ್ರ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.