ಅನರ್ಹ ಶಾಸಕ ಸುಧಾಕರ್ ಆಪರೇಷನ್ ಕಮಲದ ಕಿಂಗ್ಪಿನ್: ಸಿದ್ದರಾಮಯ್ಯ
ಬೆಂಗಳೂರು, ಡಿ.2: ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ. ಜಾತ್ಯತೀತರ ಜೊತೆ ಇದ್ದಾಗ ಅವರಂತೆ, ಕೋಮುವಾದಿಗಳ ಜೊತೆಯಿದ್ದಾಗ ಅವರಂತೆ ಬಣ್ಣ ಬದಲಾಯಿಸುತ್ತಾರೆ. ಬಿಜೆಪಿಯ ಆಪರೇಷನ್ ಕಮಲ ಯಶಸ್ಸಿನ ಕಿಂಗ್ಪಿನ್ ಈ ಸುಧಾಕರ್ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಅಭ್ಯರ್ಥಿ ಆಂಜನಪ್ಪ ಪರವಾಗಿ ಮಂಚನಬಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013ರಲ್ಲಿ ಆಂಜನಪ್ಪಗೆ ಟಿಕೇಟ್ ನೀಡುವ ಬದಲು ಸುಧಾಕರ್ಗೆ ನೀಡಿದ್ದೆ ಎಂದರು. ಒಂದು ವೇಳೆ ಆಗಲೇ ಆಂಜನಪ್ಪಗೆ ಟಿಕೇಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವ ಸ್ಥಿತಿಯೂ ಬರುತ್ತಿರಲಿಲ್ಲ ಎಂದರು.
ಎಂಥಾ ನಯವಂಚಕನಿಗೆ ಟಿಕೇಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತ್ತಾಪವಾಗುತ್ತಿದೆ. ಈ ಮನುಷ್ಯ ಯಾರಿಗೆ ಬೇಕಾದರೂ ಮಕ್ಮಲ್ ಟೋಪಿ ಹಾಕುತ್ತಾನೆ. ನನಗೂ ಮಕ್ಮಲ್ ಟೋಪಿ ಹಾಕಿ ಹೋಗಿದ್ದಾನೆ. ಸುಳ್ಳು ಹೇಳುವುದರಲ್ಲಿ, ಅದಕ್ಕೆ ಅನುಗುಣವಾಗಿ ಕಥೆ ಕಟ್ಟುವುದರಲ್ಲಿ ಸುಧಾಕರ್ ನಿಸ್ಸೀಮ ಎಂದು ಸಿದ್ದರಾಮಯ್ಯ ಹೇಳಿದರು.
ಮುಂಬೈ ರೆಸಾರ್ಟ್ಗೆ ಹೋಗುತ್ತಿರುವ ಬಗ್ಗೆ ವಿಚಾರಿಸಿದಾಗ, ಎಂಟಿಬಿ ಅವರನ್ನ ಬದಲಾಯಿಸಲು ಚೆನ್ನೈಗೆ ಹೋಗಿದ್ದಾಗಿ ಹೇಳಿದ್ದ, ಆದರೆ, ಆಮೇಲೆ ಗೊತ್ತಾಯ್ತು, ಎಂಟಿಬಿ ನಾಗರಾಜರನ್ನ ಆಣೆ-ಪ್ರಮಾಣದ ಹೆಸರಲ್ಲಿ ಹಾಳುಮಾಡಿದ್ದೆ ಈ ಸುಧಾಕರ್ ಎಂದು ಅವರು ಆರೋಪಿಸಿದರು.
ಬೆಳಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
2016-17ರ ಬಜೆಟ್ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು. ಇದರಲ್ಲಿ ನಿಮ್ಮ ಸಾಧನೆ ಏನಿದೆ ಮಿಸ್ಟರ್ ಸುಧಾಕರ್ ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದ್ದು ನಮ್ಮ ಸರಕಾರ. ನಾನು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ ಇವರೆಲ್ಲರ ಸಹಕಾರದಿಂದ ಯೋಜನೆ ಜಾರಿ ಮಾಡಿದ್ದೆ. ಕುಡಿಯಲು ನೀರು ಕೊಟ್ಟವರಿಗೆ ಮೋಸಮಾಡಿ, ಯೋಜನೆಗೆ ವಿರೋಧ ಮಾಡಿದ್ದ ಬಿಜೆಪಿ ಜೊತೆ ಈಗ ಸುಧಾಕರ್ ಕೈಜೋಡಿಸಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಸುಧಾಕರ್ ಮತ್ತೆ ಶಾಸಕರಾಗಿ ಆಯ್ಕೆಯಾದಲ್ಲಿ ಜನತಂತ್ರ ವ್ಯವಸ್ಥೆಗೆ ದೊಡ್ಡ ಕೊಡಲಿ ಪೆಟ್ಟು ಬಿದ್ದಂತೆ ಆಗುತ್ತದೆ. ಹಾಗಾಗಿ ಇಂತಹ ವ್ಯಕ್ತಿಗಳಿಗೆ ಸರಿಯಾದ ಪಾಠ ಕಲಿಸಲೇಬೇಕು. ಇಲ್ಲದಿದ್ದರೆ ರಾಜಕೀಯ ಕ್ಷೇತ್ರದ ಶುದ್ಧೀಕರಣ ಆಗುವುದಿಲ್ಲ. ತತ್ವ-ಸಿದ್ಧಾಂತ ನಿಷ್ಠರಿಗೂ ಗೌರವ ಇರುವುದಿಲ್ಲ ಎಂದರು.
5 ಬಾರಿ ಶಾಸಕರಾಗಿ ಆಯ್ಕೆಯಾದ ಬಳಿಕವೂ, ಸಚಿವ ಸ್ಥಾನ ಸಿಗದೇ ಇದ್ದಾಗಲೂ ಬೇಸರ ಮಾಡಿಕೊಳ್ಳದೇ ಪಕ್ಷ ನಿಷ್ಠೆ ಮೆರೆದವರು ಕಾಂಗ್ರೆಸ್ನಲ್ಲಿದ್ದಾರೆ. ಸುಧಾಕರ್ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು, ಇದೀಗ ಅವರು ತಮ್ಮ ಶಾಸಕ ಸ್ಥಾನವನ್ನು ಮಾರಾಟ ಮಾಡಿಕೊಳ್ಳುವಂತ ಹೀನ ಕೃತ್ಯ ಮಾಡಿದ್ದಾರೆ. ಇವರು ಮಾಡಿರುವ ಮೋಸಗಳಿಗೆ ಇತಿ-ಮಿತಿಗಳಿಲ್ಲ ಎಂದು ಅವರು ಟೀಕಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಜನಪ್ಪ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವರಾದ ಶಿವಶಂಕರೆಡ್ಡಿ, ಕೃಷ್ಣಭೈರೇಗೌಡ, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.