ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಇಚ್ಛೆ ಇಲ್ಲ: ಕುಮಾರಸ್ವಾಮಿ

Update: 2019-12-02 13:55 GMT

ಹುಬ್ಬಳ್ಳಿ, ಡಿ. 2: ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗುವ ಯಾವುದೇ ಇಚ್ಛೆ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಯಾರೂ ಮಾಡಲಿಲ್ಲ. ಈ ಬಗ್ಗೆ ನಮ್ಮ ಪಕ್ಷದವರು ಹಾಗೂ ಕಾಂಗ್ರೆಸ್ ಪಕ್ಷದ ಯಾವೊಬ್ಬ ಮುಖಂಡರೂ ಮಾತನಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರೈತರ 25 ಸಾವಿರ ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 19 ಸಾವಿರ ಕೋಟಿ ರೂ.ಅನುದಾನ ಕೊಟ್ಟಿದ್ದೆ ಎಂದ ಅವರು, ಉಪಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು. ಡಿ.9ರ ನಂತರ ಎಲ್ಲವೂ ಗೊತ್ತಾಗುತ್ತದೆ ಎಂದರು.

‘ಅಪ್ಪ-ಮಕ್ಕಳ ಪಕ್ಷವನ್ನು ಮನೆಗೆ ಕಳಿಸುವೆ’ ಎಂಬ ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ಅಪ್ಪ-ಮಕ್ಕಳನ್ನು ಮನೆ ಕಳುಹಿಸುವ ಮಾತುಗಳನ್ನು ಆಡಿದ ರಮೇಶ್ ಜಾರಕಿಹೊಳಿ ಅವರೇ ಸ್ವತಃ ಮನೆಗೆ ಹೋಗಲಿದ್ದಾರೆ ಎಂದು ಗುಡುಗಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News