ಕಲಬುರಗಿ: 8 ವರ್ಷದ ಬಾಲಕಿಯ ಅತ್ಯಾಚಾರಗೈದು ಹತ್ಯೆ

Update: 2019-12-03 12:44 GMT

ಕಲಬುರ್ಗಿ, ಡಿ.3: ಹೈದರಾಬಾದಿನಲ್ಲಿ ಡಾ.ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನವೇ, ರಾಜ್ಯದಲ್ಲೊಂದು ಹೀನ ಕೃತ್ಯ ಬೆಳಕಿಗೆ ಬಂದಿದ್ದು, ಇಲ್ಲಿನ ಚಿಂಚೋಳಿ ಬಳಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ವರದಿಯಾಗಿದೆ.

ಚಿಂಚೋಳಿ ತಾಲೂಕಿನಲ್ಲಿ ಈ ಕೃತ್ಯ ನಡೆದಿದ್ದು, 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಾಯಿರಾ(ಹೆಸರು ಬದಲಾಯಿಸಲಾಗಿದೆ) ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ, ಕೊಲೆಗೈದಿದ್ದಾರೆ ಎಂದು ಹೇಳಲಾಗುತ್ತಿದೆ.

ಸೋಮವಾರ ಮಧ್ಯಾಹ್ನ ಶಾಲೆಯಿಂದ ಊಟಕ್ಕಾಗಿ ಹೊರಬಂದ ಸಾಯಿರಾಳನ್ನು, ಇದೇ ಗ್ರಾಮದ ಯಲ್ಲಪ್ಪ(35) ಎಂಬಾತ ಕರೆದುಕೊಂಡು ಹೋಗಿದ್ದ ಎನ್ನಲಾಗಿದ್ದು, ಅನುಮಾನದ ಹಿನ್ನೆಲೆ ಆರೋಪಿಯನ್ನು ಸುಲೇಪೇಟ ಪೊಲೀಸರು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾಕಾಪುರದ ಅಂಗನವಾಡಿ ಕೇಂದ್ರದಿಂದ ಬಾಲಕಿಯನ್ನು ಕರೆದುಕೊಂಡು ಹೋಗಿರುವ ಆರೋಪಿ ಯಲ್ಲಪ್ಪ, ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಬಳಿಕ, ಮುಲ್ಲಾಮರಿ ಯೋಜನೆ ಕಾಲುವೆ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಲಬುರ್ಗಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸದ್ಯ ಇದರಿಂದ ಗ್ರಾಮದಲ್ಲಿ ಎರಡು ಕೋಮಿನ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮಂಗಳವಾರ ಕೆಲ ಕಾಲ ಅಂಗಡಿ ಮುಂಗಟ್ಟು ಸ್ವಯಂ ಘೋಷಿತ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News