ಬಂಟ್ವಾಳ : ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ವಿಷಯವಾರು ಕಾರ್ಯಾಗಾರಕ್ಕೆ ಚಾಲನೆ
ಬಂಟ್ವಾಳ : ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲೆ ಸಜಿಪನಡುವಿನಲ್ಲಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣ ಸಂಯೋಜಕಿ ಸುಶೀಲ ಉದ್ವಾಟಿಸಿ, ಈ ತರಬೇತಿ ಕಾರ್ಯಾಗಾರದ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು. ಬಂಟ್ವಾಳ ತಾಲೂಕಿನ ಫಲಿತಾಂಶವನ್ನು ಉತ್ತಮ ಪಡಿಸಲು ಈ ಕಾರ್ಯಾಗಾರವನ್ನು ಪ್ರತೀ ವರ್ಷ ನಡೆಸಲು ಟ್ಯಾಲೆಂಟ್ ಸಂಸ್ಥೆಯು ಶಿಕ್ಷಣ ಇಲಾಖೆಗೆ ಸಹಕರಿಸುವುದು ಶ್ಲಾಘನೀಯ ಎಂದು ತಿಳಿಸಿದರು.
ಬಂಟ್ವಾಳ ತಾಲೂಕಿನ 22 ಸರಕಾರಿ ಮತ್ತು ಅನುದಾನಿತ ಪ್ರೌಢ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮ ಪಡಿಸುವ ಸಲುವಾಗಿ ಗಣಿತ, ವಿಜ್ಞಾನ, ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ವಿಷಯಗಳ ತರಬೇತಿಯ ಜೊತೆಗೆ ಪರೀಕ್ಷೆಯನ್ನು ಎದುರಿಸುವುದು ಹೇಗೆ ? ಎಂಬ ಪ್ರೇರಣಾ ತರಗತಿ ನಡೆಸಲಾಯಿತು.
ಮುಖ್ಯ ಅತಿಥಿಯಾಗಿ ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸಿರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸಂಸ್ಥೆಯ ಅಧ್ಯಕ್ಷ ರಿಯಾಝ್ ಅಹ್ಮದ್ ಕಣ್ಣೂರು ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆ ಸಜಿಪ ನಡು ಶಾಲೆಯ ಮುಖ್ಯಶಿಕ್ಷಕ ವೀರಪ್ಪ ಸ್ವಾಗತಿಸಿ, ರಾಜ್ಯ ತರಬೇತುದಾರರಾದ ಪರಮೇಶ್ವರ್ ಹೆಗಡೆ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ತರಬೇತಿ ನೀಡಿದರು.
ನಿವೃತ ಶಿಕ್ಷಕ ಮತ್ತು ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ತುಂಬೆ ವಿದ್ಯಾರ್ಥಿಗಳಿಗೆ ಪ್ರೇರಣಾ ತರಬೇತಿ ನಡೆಸಿಕೊಟ್ಟರು. ಈ ಕಾರ್ಯಕ್ರಮದ ಸಂಯೋಜಕ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ಪ್ರ.ಕಾರ್ಯದರ್ಶಿ ಡಿ. ಅಬ್ದುಲ್ ಹಮೀದ್ ಕಣ್ಣೂರು ಉಪಸ್ಥಿತರಿದ್ದರು.
ಶಿಕ್ಷಕ ಲಕ್ಷ್ಮಣ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜೆನಿಫರ್ ವಂದಿಸಿದರು. ಈ ಸಂದರ್ಭ ಕಾವಲಪಡೂರು ವಗ್ಗ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮುಬಾರಕ್ ಜುಮಾ ಮಸೀದಿ ಬಾಂಬಿಲ ಇದರ ಅಧ್ಯಕ್ಷ ಅಬ್ದುಲ್ ಹಮೀದ್ ದೊಡ್ಡಮನೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ತನ್ವೀರ್ ಬಾಂಬಿಲ ಭಾಗವಹಿಸಿದರು. ಟಿ.ಆರ್.ಎಫ್ ಸಂಸ್ಥೆಯ ಸಂಯೋಜಕ ನಕಾಶ್ ಬಾಂಬಿಲ ಸ್ವಾಗತಿಸಿದರು. ಶಿಕ್ಷಕ ರಮೇಶ್ ನಾಯ್ಕ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ತರಬೇತಿ ನೀಡಿದರು. ಸಮನ್ವಯ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಸಮಿಯುಲ್ಲ ಮೈಂದಾಳ ವಿದ್ಯಾರ್ಥಿಗಳಿಗೆ ಪ್ರೇರಣಾ ತರಬೇತಿ ನೀಡಿದರು. ಪದ್ಮಲತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸರ್ಕಾರಿ ಪ್ರೌಢಶಾಲೆ ಕಾವಲ್ಕಟ್ಟೆ ಮತ್ತು ಸರ್ಕಾರಿ ಪ್ರೌಢಶಾಲೆ ನಾವೂರು ಇಲ್ಲಿಯ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.