ವಿಪಕ್ಷಗಳ ಷಡ್ಯಂತ್ರಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಡಿಸಿಎಂ ಲಕ್ಷ್ಮಣ ಸವದಿ

Update: 2019-12-09 12:57 GMT

ಬೆಂಗಳೂರು, ಡಿ. 9: ‘ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಭಾರಿ ಬಹುಮತಗಳಿಂದ ಜಯಭೇರಿ ಬಾರಿಸಿರುವುದು ನನಗೆ ಅತ್ಯಂತ ಸಂತೋಷ ತಂದಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. 

ಈ ಚುನಾವಣೆಯಲ್ಲಿ ಅಥಣಿ ಮತ್ತು ಕಾಗವಾಡ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವಂತಹ ಜವಾಬ್ದಾರಿಯನ್ನು ವಹಿಸಲಾಗಿತ್ತು. ಇದನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಹಾಗೂ ಈ ಎರಡು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿಕೊಂಡು ಬರುವಲ್ಲಿ ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸುವೆ ಎಂದರು.

ಇಡೀ ರಾಜ್ಯದಲ್ಲಿ ಬಿಜೆಪಿಯ ಪರ ಇರುವಂತಹ ಅಲೆ ಮತ್ತೊಮ್ಮೆ ಸಾಬೀತಾಗಿದೆ. ಮುಂದೆಯೂ ತಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಮಾರ್ಗದರ್ಶನಗಳೊಂದಿಗೆ ಉತ್ತಮ ಆಡಳಿತ ನೀಡುವುದಕ್ಕೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಲಕ್ಷ್ಮಣ ಸವದಿ ಇಂದಿಲ್ಲಿ ತಿಳಿಸಿದರು.

ವಾಮಮಾರ್ಗದಿಂದ ಬಿಜೆಪಿಯನ್ನು ಸೋಲಿಸಬೇಕೆಂಬ ವಿಪಕ್ಷದವರ ಷಡ್ಯಂತ್ರಕ್ಕೆ ಜನತೆ ತಕ್ಕಪಾಠ ಕಲಿಸಿದ್ದಾರೆಂಬುದು ಈ ಫಲಿತಾಂಶದಿಂದ ಮತ್ತೊಮ್ಮೆ ಸಾಬೀತಾಗಿದೆ. ಅಷ್ಟೇ ಅಲ್ಲ ಕೇಂದ್ರ ಮತ್ತು ರಾಜ್ಯಗಳಲ್ಲಿ ಸ್ಥಿರ ಸರಕಾರ ಮತ್ತು ಜನಪರ ಆಡಳಿತ ನೀಡುವುದಕ್ಕೆ ಜನರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News