ಲೈಂಗಿಕ ಕಿರುಕುಳ ಆರೋಪ: ಪ್ರೊ.ಗಿರಿಧರ ಮದ್ರಾಸ್ ಮರು ನೇಮಕ ಆದೇಶಕ್ಕೆ ಹೈಕೋರ್ಟ್ ತಡೆ

Update: 2019-12-10 17:18 GMT

ಬೆಂಗಳೂರು, ಡಿ.10: ಲೈಂಗಿಕ ದೌರ್ಜನ್ಯದ ಆರೋಪದಡಿ ಕಡ್ಡಾಯ ನಿವೃತ್ತಿಗೆ ಒಳಗಾಗಿರುವ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಪ್ರೊ.ಗಿರಿಧರ ಮದ್ರಾಸ್ ಅವರನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂಬ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ. 

ಈ ಕುರಿತು ಐಐಎಸ್‌ಸಿ ಮೇಲ್ಮನವಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ, ಸಂಸ್ಥೆಯ ಆಂತರಿಕ ತನಿಖಾ ಸಮಿತಿ ಗಿರಿಧರ ಅವರು ಕಡ್ಡಾಯ ನಿವೃತ್ತಿ ಪಡೆಯುವಂತೆ 2018ರ ಫೆಬ್ರುವರಿಯಲ್ಲಿ ಆದೇಶಿಸಿತ್ತು. ಇದನ್ನು ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ 2019ರ ಆ.6ರಂದು ಪ್ರೊ.ಗಿರಿಧರ ಅವರನ್ನು ಮರು ನೇಮಕ ಮಾಡಿಕೊಳ್ಳಬೇಕು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ಹೆಸರು ಬಹಿರಂಗಪಡಿಸಿದ್ದಕ್ಕಾಗಿ ಐಐಎಸ್‌ಸಿ ನಿರ್ದೇಶಕರು ಹಾಗೂ ಸಂಸ್ಥೆಯ ಆಂತರಿಕ ಸಮಿತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News