ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ಹೊಸದಿಲ್ಲಿ, ಡಿ.13: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಪೌರತ್ವ (ತಿದ್ದುಪಡಿ) ಮಸೂದೆ-2019ಕ್ಕೆ ಅಂಕಿತ ಹಾಕುವ ಮೂಲಕ ಅದು ಕಾಯ್ದೆಯಾಗಿ ಜಾರಿಗೆ ಬಂದಿದೆ.
ಅಧಿಕೃತ ಗಜೆಟ್ನಲ್ಲಿ ಇದನ್ನು ಪ್ರಕಟಿಸುವ ಮೂಲಕ ಗುರುವಾರದಿಂದಲೇ ಇದು ಕಾಯ್ದೆಯಾಗಿ ಪರಿವರ್ತನೆಯಾಗಿದೆ ಎಂದು ಅಧಿಕೃತ ಪ್ರಕಟನೆ ಹೇಳಿದೆ.
ಇದೀಗ ಪೌರತ್ವ ತಿದ್ದುಪಡಿ ಕಾಯ್ದೆಯ ಅನ್ವಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ 2014ರ ಡಿಸೆಂಬರ್ 31ಕ್ಕೆ ಮುನ್ನ ಭಾರತಕ್ಕೆ ವಲಸೆ ಬಂದ ಹಿಂದೂ, ಸಿಕ್ಖ್, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರನ್ನು ಇನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುವುದಿಲ್ಲ ಹಾಗೂ ಅವರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ.
ಈ ತಿದ್ದುಪಡಿ ವಿರುದ್ಧ ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಮಧ್ಯೆ ರಾಜ್ಯಸಭೆಯಲ್ಲಿ ಬುಧವಾರ ಹಾಗೂ ಲೋಕಸಭೆಯಲ್ಲಿ ಸೋಮವಾರ ಈ ವಿವಾದಿತ ಮಸೂದೆಗೆ ಆಂಗೀಕಾರ ನೀಡಲಾಗಿತ್ತು.