ಪೌರತ್ವ ಮಸೂದೆಯ ಮೂಲಕ 1.5 ಕೋಟಿ ಹಿಂದೂಗಳಿಗೆ ರಕ್ಷಣೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

Update: 2019-12-19 06:17 GMT

ಮಂಗಳೂರು, ಡಿ.13: ದ.ಕ ಜಿಲ್ಲೆಯಲ್ಲಿ ಕಳೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಶೇ.60-70 ಪಂಚಾಯತ್‌ಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಶೇ.90ರಷ್ಟು ಪಂಚಾಯತ್‌ಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನಿಟ್ಟು ಕೆಲಸ ಮಾಡಬೇಕಿದೆ. ಆ ಮೂಲಕ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತಗೊಳಿಸಲು ಶ್ರಮಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ ಬಳಿಕ ಶುಕ್ರವಾರ ಮಂಗಳೂರಿಗೆ ಆಗಮಿಸಿದ ನಳಿನ್ ಅವರನ್ನು ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕರಾವಳಿ ಸಹಿತ ರಾಜ್ಯ ಹಾಗೂ ಇಡೀ ದೇಶದ ಜನತೆ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಮತದಾರರು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ವರ್ತಿಸಿ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನು ಬಳಸಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯ ಮೂಲಕ ನರೇಂದ್ರ ಮೋದಿ ನೇತೃತ್ವದ ಸರಕಾರ 1.5 ಕೋಟಿ ಹಿಂದೂಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಿದೆ. ಮೋದಿಯ ಈ ಆಡಳಿತಾವಧಿಯಲ್ಲಿಯೇ ರಾಮಮಂದಿರ ನಿರ್ಮಾಣವಾಗುವ ವಿಶ್ವಾಸವಿದೆ ಎಂದು ನಳಿನ್ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಿತ ಸಂಪುಟದ ಎಲ್ಲ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ನಡೆಸಿದ ಪ್ರಯತ್ನದ ಫಲವನ್ನು ನಾವಿಂದು ಉಪಚುನಾವಣೆಯ ಫಲಿತಾಂಶದ ಮೂಲಕ ಅನುಭವಿಸುತ್ತಿದ್ದೇವೆ ಎಂದ ನಳಿನ್, ನಾನು ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದಾಗ ಕರಾವಳಿಯ ರೀತಿಯಲ್ಲಿಯೇ ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದಿದ್ದೆ. ಆವಾಗ ಕೆಲವರು ನನ್ನನ್ನು ಗೇಲಿ ಮಾಡಿದ್ದರು. ಕೇಸರಿ ಮುಂದಿಟ್ಟುಕೊಂಡು ಸಂಘಟನೆ ಮಾಡುತ್ತಾರೆ ಎಂದು ಟೀಕಿಸಿದ್ದರು. ಆದರೆ ಎದೆಗುಂದದೆ ಉಪಚುನಾವಣೆಯನ್ನು ಸಂಘಟಿತವಾಗಿ ಎದುರಿಸಿದೆವು. ಕರಾವಳಿಯಲ್ಲಿ ಪ್ರತಿ ಮತಗಟ್ಟೆಯನ್ನು ಬಲಿಷ್ಠಗೊಳಿಸಿರುವಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಮತಗಟ್ಟೆಗಳನ್ನು ಕೂಡ ಪೇಜ್‌ ಪ್ರಮುಖ್‌ರ ಮೂಲಕ ಬಲಿಷ್ಠಗೊಳಿಸಲಾಗುವುದು. ಮುಂದಿನ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಬೆಂಗಳೂರು ಮೇಯರ್ ಆಯ್ಕೆ, ನಗರ ಸ್ಥಳೀಯಾಡಳಿತ ಚುನಾವಣೆ ಮತ್ತು ಉಪಚುನಾವಣೆಗಳು ಎದುರಾದವು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕ ಯೋಗೀಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ರವಿಶಂಕರ್ ಮಿಜಾರ್ ಕಾರ್ಯಕ್ರಮ ನಿರೂಪಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತೊಂದರೆಗಳ ಬಗ್ಗೆ ಗುರುವಾರ ಮತ್ತೊಮ್ಮೆ ಕೇಂದ್ರ ಸಚಿವರ ಜತೆಗೆ ಚರ್ಚಿಸಿದ್ದು, ಅವರು 15 ದಿನಗಳೊಳಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಜಿಲ್ಲೆಯ ಹೊಸ ರೈಲ್ವೆ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿವೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ನಳಿನ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News