ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಕಾಂಗ್ರೆಸ್ ಮುಖಂಡರ ಟೀಕೆ

Update: 2019-12-19 16:46 GMT

ಬೆಂಗಳೂರು, ಡಿ.19: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹತ್ತಿಕಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ನಿಷೇಧಾಜ್ಞೆ ಹೇರುವ ಮೂಲಕ ಬಿಜೆಪಿ ಸರಕಾರ ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದೆ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಪರಿಷತ್ ಸದಸ್ಯ ಅಬ್ದಲ್ ಜಬ್ಬಾರ್, ರಾಜ್ಯ ಸರಕಾರ ಸಂವಿಧಾನ ವಿರುದ್ಧವಾಗಿ ವರ್ತಿಸುತ್ತಿದ್ದು, ಅಭಿವ್ಯಕ್ತ ಸ್ವಾತಂತ್ರ ಮೊಟಕುಗೊಳಿಸಿದೆ ಎಂದು ಟೀಕಿಸಿದರು.

ಈ ವೇಳೆ ಮಾತನಾಡಿದ ವಿ.ಎಸ್.ಉಗ್ರಪ್ಪ, ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ಬಾಹಿರ. ಈ ಕಾಯ್ದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಭಟನೆ, ಶಾಂತಿಯುತ ಧರಣಿ ಸತ್ಯಾಗ್ರಹಕ್ಕೆ ನಿಷೇಧ ಹೇರುವುದು ಅಕ್ಷಮ್ಯ. ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಮಂದಿಯನ್ನು ಬಂಧಿಸಿದ್ದು ಖಂಡನೀಯ ಎಂದು ಕಿಡಿಕಾರಿದರು.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದು, ಪೊಲೀಸರು ಅವರನ್ನು ಎಳೆದಾಡಿದ್ದಾರೆ. ಅಲ್ಲದೆ, ಸಿಎಂ ಯಡಿಯೂರಪ್ಪ ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ್ದು, ಇದು ಅವರ ವರ್ತನೆಯನ್ನು ಎತ್ತಿತೋರಿಸುತ್ತದೆ. ಅಧಿಕಾರ ಶಾಶ್ವತವಲ್ಲ ಎಂಬುದು ನೆನಪಿರಲಿ ಎಂದು ಉಗ್ರಪ್ಪ ಎಚ್ಚರಿಕೆ ನೀಡಿದರು.

ಸವಾಲು: ಇಪ್ಪತ್ತ್ನಾಲ್ಕು ಗಂಟೆಯೊಳಗೆ ಮಹದಾಯಿ ಸಮಸ್ಯೆ ಬಗೆಹರಿಸುವ ವಾಗ್ದಾನ ನೀಡಿದ್ದ ಬಿ.ಎಸ್.ಯಡಿಯೂರಪ್ಪನವರೇ ಕೇಂದ್ರದಲ್ಲಿ ನಿಮ್ಮದೆ ಸರಕಾರವಿದೆ ಕೂಡಲೇ ಸಮಸ್ಯೆ ಬಗೆಹರಿಸಬೇಕು. ಆ ಮೂಲಕ ಆ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಬೇಕು ಎಂದು ಉಗ್ರಪ್ಪ ಸವಾಲು ಹಾಕಿದರು.

ವಿವಿಗೆ ವಾಲ್ಮೀಕಿ ಹೆಸರಿಡಿ: ಇಂದಿರಾ ಕ್ಯಾಂಟೀನ್‌ಗೆ ಹೆಸರು ಬದಲಿಸಿ ವಾಲ್ಮೀಕಿ ಹೆಸರಿಡುವುದು ಸರಿಯಲ್ಲ. ನಾನು ಮಹರ್ಷಿ ವಾಲ್ಮೀಕಿ ಸಮುದಾಯದವನೆ. ರಾಜ್ಯದ ವಿಶ್ವ ವಿದ್ಯಾಲಯಕ್ಕೆ ವಾಲ್ಮೀಕಿ ಹೆಸರಿಡಿ. ಅಲ್ಲದೆ, ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಿ ಎಂದು ಆಗ್ರಹಿಸಿದರು.

ಡಿಸಿಎಂ ಹುದ್ದೆ ನೆಪದಲ್ಲಿ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ನಡುವೆ ಒಡಕು ಮೂಡಿಸಿದ್ದು, ವಾಲ್ಮೀಕಿ ಸಮುದಾಯದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ. ಸುಖಾ ಸುಮ್ಮನೆ ಕಾಟಾಚಾರಕ್ಕೆ ಸಮುದಾಯದ ಹೆಸರು ಪ್ರಸ್ತಾಪ ಸರಿಯಲ್ಲ. ಬಿಜೆಪಿಗೆ ದಲಿತ ಮತ್ತು ಹಿಂದುಳಿದ ವರ್ಗಗಳ ಬಗ್ಗೆ ಯಾವುದೇ ಕಳಕಳಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಎತ್ತ ಸಾಗುತ್ತಿದೆ ರಾಜ್ಯ:

‘ನಮ್ಮ ರಾಜ್ಯದಲ್ಲಿ ಪ್ರತಿಭಟನೆ ಮಾಡಬೇಡಿ, ಪ್ರತಿಭಟನೆ ಮಾಡುವುದಿದ್ದರೆ ಉತ್ತರ ಭಾರತಕ್ಕೆ ಹೋಗಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಇದನ್ನು ಗಮನಿಸಿದರೆ ರಾಜ್ಯ ಎತ್ತ ಸಾಗುತ್ತಿದೆ ಎನಿಸದಿರದು’

-ಎಚ್.ಎಂ.ರೇವಣ್ಣ ಮಾಜಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News