ಪ್ರಮಾಣ ವಚನ ಸ್ವೀಕರಿಸಿದ 13 ನೂತನ ಶಾಸಕರು

Update: 2019-12-22 12:38 GMT

ಬೆಂಗಳೂರು, ಡಿ.22: ರಾಜ್ಯ ವಿಧಾನ ಸಭೆಯ 15 ಮತ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಬಿಜೆಪಿಯ 12 ಹಾಗೂ ಓರ್ವ ಪಕ್ಷೇತರ ಸದಸ್ಯರು ಒಳಗೊಂಡಂತೆ 13 ನೂತನ ಸದಸ್ಯರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರವಿವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ನೂತನ ಸದಸ್ಯರಾದ ಅಥಣಿ ವಿಧಾನಸಭಾ ಕ್ಷೇತ್ರದ ಮಹೇಶ್ ಕುಮಟಳ್ಳಿ, ಕಾಗವಾಡ ಕ್ಷೇತ್ರದ ಶ್ರೀಮಂತ್ ಪಾಟೀಲ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಯಲ್ಲಾಪುರ ಕ್ಷೇತ್ರದ ಅರಬೈಲ್ ಹೆಬ್ಬಾರ್ ಶಿವರಾಮ್, ಹಿರೇಕೆರೂರು ಕ್ಷೇತ್ರದ ಬಿ.ಸಿ.ಪಾಟೀಲ್, ರಾಣೇಬೆನ್ನೂರು ಕ್ಷೇತ್ರದ ಅರುಣ್ ಕುಮಾರ್ ಗುತ್ತೂರು, ವಿಜಯನಗರ ಕ್ಷೇತ್ರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರ ಕ್ಷೇತ್ರದ ಡಾ.ಕೆ.ಸುಧಾಕರ್, ಕೃಷ್ಣರಾಜಪುರ ಕ್ಷೇತ್ರದ ಬಿ.ಎ.ಬಸವರಾಜ, ಯಶವಂತಪುರ ಕ್ಷೇತ್ರದ ಎಸ್.ಟಿ.ಸೋಮಶೇಖರ್, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಕೆ.ಗೋಪಾಲಯ್ಯ, ಹೊಸಕೋಟೆ ಕ್ಷೇತ್ರದ ಶರತ್ ಕುಮಾರ್ ಬಚ್ಚೇಗೌಡ ಹಾಗೂ ಕೆ.ಆರ್.ಪೇಟೆ ಕ್ಷೇತ್ರದ ಎಂ.ಸಿ. ನಾರಾಯಣಗೌಡ ಶಾಸಕರಾಗಿ, ಎಲ್ಲರೂ ಕನ್ನಡ ಭಾಷೆಯಲ್ಲಿಯೇ, ಪ್ರಮಾಣ ವಚನ ಸ್ವೀಕರಿಸಿದರು.

ಬಿ.ಎ.ಬಸವರಾಜ ಮತ್ತು ಎಸ್.ಟಿ.ಸೋಮಶೇಖರ್ ಅವರು ಸತ್ಯ-ನಿಷ್ಠೆಯ ಹೆಸರಿನಲ್ಲಿ, ಬಿ.ಸಿ.ಪಾಟೀಲ್ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಹಾಗೂ ಉಳಿದ ಹತ್ತು ಸದಸ್ಯರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಅಬಕಾರಿ ಸಚಿವ ಎಚ್.ನಾಗೇಶ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ನಿರೂಪಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಶರತ್ ಬಚ್ಚೇಗೌಡರನ್ನು ಮಾತನಾಡಿಸದ ಸಿಎಂ

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಶರತ್ ಕುಮಾರ್ ಬಚ್ಚೇಗೌಡ, ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಮಾತನಾಡಿಸಲು ಮುಂದಾದರು. ಆದರೆ, ಮುಖ್ಯಮಂತ್ರಿ ಮಾತ್ರ ಅವರನ್ನು ಮಾತನಾಡಿಸದೆ ಮುಖ ತಿರುಗಿಸಿಕೊಂಡು ಮುಂದೆ ಹೋದರು.

ಕಾಂಗ್ರೆಸ್ ಸದಸ್ಯರ ಗೈರು

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಸದಸ್ಯ ರಿಝ್ವನ್ ಅರ್ಶದ್ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರದ ಎಚ್.ಪಿ.ಮಂಜುನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News