ಫೆ.17ರಿಂದ ಜಂಟಿ ಅಧಿವೇಶನ, ಮಾ.5ರಂದು ಬಜೆಟ್ ಮಂಡನೆ

Update: 2019-12-30 12:32 GMT

ಬೆಂಗಳೂರು, ಡಿ. 30: ಮುಖ್ಯಮಂತ್ರಿ ಯಡಿಯೂರಪ್ಪನವರ ವಿದೇಶಿ ಪ್ರವಾಸದ ಹಿನ್ನೆಲೆಯಲ್ಲಿ 2020ರ ಜನವರಿ 20ರಿಂದ ನಿಗದಿಯಾಗಿದ್ದ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಫೆ.17ರಿಂದ 21ರ ವರೆಗೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸೋಮವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಚಿವ ಸಂಪುಟ ಸಭಾಮಂದಿರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಫೆ.17ರಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಮಾ.5ಕ್ಕೆ ಬಜೆಟ್: ಮಾ.2ರಿಂದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.5ಕ್ಕೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ನೇತೃತ್ವದ ಸರಕಾರ ಮಹತ್ವದ ಬಜೆಟ್ ಮಂಡನೆ ಮಾಡಲಿದ್ದಾರೆಂದು ಮಾಧುಸ್ವಾಮಿ ಮಾಹಿತಿ ನೀಡಿದರು.

ಕೇಂದ್ರ ಸರಕಾರದ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ 21ರಿಂದ ಐದು ದಿನಗಳ ಕಾಲ ವಿದೇಶಿ ಪ್ರವಾಸ ಕೈಗೊಳ್ಳಲಿದ್ದು, ಆ ಹಿನ್ನೆಲೆಯಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನದ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಗೊತ್ತಾಗಿದೆ.

ಕೆಪಿಎಸ್ಸಿ ನಿಯಮಗಳಿಗೆ ತಿದ್ದುಪಡಿ: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದಿಂದ ಕೆಲ ಇಲಾಖೆಗಳ ನೇಮಕಾತಿಯಲ್ಲಿ ‘ಎ’ ಮತ್ತು ‘ಬಿ’ ದರ್ಜೆ ಹುದ್ದೆಗಳ ಆಯ್ಕೆಗೆ ಸಂದರ್ಶನವಿಲ್ಲದೆ ನೇಮಕ ಮಾಡಿಕೊಳ್ಳುವ ಸಂಬಂಧ ಕೆಪಿಎಸ್ಸಿ ನಿಯಮಗಳಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಿ ಮತ್ತು ಡಿ ದರ್ಜೆ ಹುದ್ದೆಗಳ ಮಾದರಿಯಲ್ಲೇ ಸಂದರ್ಶನ ಇಲ್ಲದೆ ಲಿಖಿತ ಪರೀಕ್ಷೆ ಮೂಲಕ ಅಂಕ ಗಳಿಕೆ ಆಧಾರದ ಮೇಲೆ ಕೆಲ ಇಲಾಖೆಗಳಿಗೆ ಸೀಮಿತವಾಗಿ ಎ ಮತ್ತು ಬಿ ದರ್ಜೆ ಹುದ್ದೆಗಳಿಗೂ ಸಂದರ್ಶನ ಇಲ್ಲದೆ ನೇಮಕಾತಿ ಮಾಡಿಕೊಳ್ಳಲು ತಿದ್ದುಪಡಿ ತರಲಾಗುವುದು ಎಂದರು.

ಬೆಂಗಳೂರು ಟರ್ಫ್ ಕ್ಲಬ್‌ನಿಂದ 37.46 ಕೋಟಿ ರೂ.ಬಾಡಿಗೆ ಬರಬೇಕಾಗಿದ್ದು, ಅದರ ಗುತ್ತಿಗೆ ಅವಧಿ ಮುಕ್ತಾಯವಾಗಿದೆ. ಆದರೆ, ಅವರು ಬಾಡಿಗೆ ಪಾವತಿಸದೆ ಕೋರ್ಟ್ ವೆುಟ್ಟಿಲೇರಿದ್ದರು. ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಸೂಚಿಸಿತ್ತು. ರಾಜ್ಯದ ಅಡ್ವೋಕೆಟ್ ಜನರಲ್ ಸೂಚನೆ ಹಿನ್ನೆಲೆಯಲ್ಲಿ ಬಾಡಿಗೆ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅನಂತರ ಕ್ಲಬ್‌ನ ಗುತ್ತಿಗೆ ಅವಧಿ ಮುಂದುವರಿಸಬೇಕೋ ಅಥವಾ ಬೇಡವೋ ಎಂಬುದನ್ನು ತೀರ್ಮಾನಿಸಲಾಗುತ್ತದೆ. ಟರ್ಫ್ ಕ್ಲಬ್ ಸ್ಥಳಾಂತರಕ್ಕೆ ತೀರ್ಮಾನಿಸಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.

ಹೆಣ್ಣು ಮಕ್ಕಳಿಗೆ ಅವಕಾಶ: ಹೆಣ್ಣು ಮಕ್ಕಳಿಗೆ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ಅವಕಾಶ ಕಲ್ಪಿಸುವ ಸಂಬಂಧ ಅಂಗಡಿ ಮತ್ತು ವಾಣಿಜ್ಯ ಕಾಯ್ದೆಗೆ ಬರುವ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು ಎಂದು ಮಾಧುಸ್ವಾಮಿ ಇದೇ ವೇಳೆ ತಿಳಿಸಿದರು.

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಶೇ.25ರಷ್ಟು ಸೀಟುಗಳನ್ನು ಕನ್ನಡಿಗರಿಗೆ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಮುಂದಿನ ಅಧಿವೇಶನದಲ್ಲಿ ವಿಧೇಯಕದ ಮಂಡನೆ ಮಾಡಲಾಗುತ್ತದೆ. ಅಲ್ಲದೆ, ಕಲಬುರ್ಗಿಯ ಜೇವರ್ಗಿಯ ಯಡ್ರಾಮಿ, ದಾವಣಗೆರೆ ನ್ಯಾಮತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಬಾದಾಮಿ ಪುರಸಭೆ ಮೇಲ್ದರ್ಜೆಗೇರಿಕೆಗೆ ಅನುಮತಿ ನೀಡಲಾಗಿದೆ ಎಂದರು.

2020ರ ನವೆಂಬರ್ 3,4 ಮತ್ತು 5ರಂದು ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಲ್ಲದೆ, ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಆ ಭಾಗದ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ನಷ್ಟ ವಸೂಲಿಗೆ ಕಾಯ್ದೆ ಇಲ್ಲ: ‘ಉತ್ತರ ಪ್ರದೇಶ ಮಾದರಿಯಲ್ಲೆ ಸಿಎಎ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದಿದ್ದ ಸಾರ್ವಜನಿಕ ಆಸ್ತಿ ನಷ್ಟವನ್ನು ಪ್ರತಿಭಟನಾಕಾರರಿಂದಲೇ ವಸೂಲಿ ಮಾಡುವ ಸಂಬಂಧ ಯಾವುದೇ ಕಾನೂನು ತರುವುದಿಲ್ಲ’

-ಜೆ.ಸಿ.ಮಾಧುಸ್ವಾಮಿ, ಕಾನೂನು ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News