ಬಂಧಿತರು ಅಮಾಯಕರಾಗಿದ್ದಲ್ಲಿ ನ್ಯಾಯ: ಗೃಹಸಚಿವ ಬಸವರಾಜ ಬೊಮ್ಮಾಯಿ
ಮಂಗಳೂರು, ಡಿ.31: ನಗರದಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಯಲ್ಲಿ ಅಮಾಯಕರ ಬಂಧನವಾಗಿದೆ ಎಂದು ಆರೋಪಿಸಿ ಹಲವರು ದೂರು ನೀಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ನ್ಯಾಯಾಂಗ ಬಂಧನದಲ್ಲಿರುವವರು ಅಮಾಯಕರಾಗಿದ್ದರೆ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲಾಗುವುದು. ಅದೇರೀತಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೂ ನಿದೇರ್ಶನ ನೀಡಿದ್ದೇನೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಅಸಹಕಾರ ಚಳವಳಿ ಮತ್ತು ಬಿಜೆಪಿ ನೇತೃತ್ವದಲ್ಲಿ ಜನ ಜಾಗೃತಿ ಸಭೆಗೆ ಅನುಮತಿ ಕೋರಿ ಸಂಘಟಕರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮತ್ತು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದೇನೆ. ಈ ಮಧ್ಯೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾತಾವರಣ ತಿಳಿಗೊಳ್ಳುವವರೆಗೆ ಅಂದರೆ, 8, 10 ದಿನಗಳ ವರೆಗೆ ಎರಡೂ ಕಾರ್ಯಕ್ರಮಗಳನ್ನು ಮುಂದೂಡುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡಿದ್ದೇನೆ. ಈ ಬಗ್ಗೆ ಚರ್ಚಿಸಿ ತಿಳಿಸುವುದಾಗಿ ನಾಯಕರು ಭರವಸೆ ನೀಡಿದ್ದಾರೆ ಎಂದು ಗೃಹಸಚಿವರು ತಿಳಿಸಿದರು.
ಮಂಗಳೂರಿನಲ್ಲಿ ಡಿ.19ರ ಬಳಿಕ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಎಲ್ಲರೂ ಶಾಂತಿಗೆ ಒತ್ತು ನೀಡಿದ್ದಾರೆ. ಗೋಲಿಬಾರ್ ಸಂತ್ರಸ್ತರಿಗೆ ಪರಿಹಾರ ವಾಪಸ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾ ವರದಿಯ ಆಧಾರದಲ್ಲಿ ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಹಾಗೂ ಸಮುದಾಯಗಳ ಬಗ್ಗೆ ಸೌಹಾರ್ದ ವಾತಾವರಣ ಕಲ್ಪಿಸಲು ಸೂಚಿಸಿದ್ದೇನೆ ಎಂದರು.
ಯಾವುದೇ ಗಲಭೆಯ ಸಂದರ್ಭ ಕೇವಲ ಶಾಂತಿ ಸಭೆ ನಡೆಯುತ್ತಿದೆ. ಅದರಿಂದ ಪ್ರಯೋಜನ ಕಂಡುಬರುತ್ತಿಲ್ಲ. ಆಗಾಗಿ ವಾರ್ಡ್ ಮಟ್ಟದಲ್ಲಿ ಶಾಂತಿ ಸಭೆ ನಡೆಸಲು ಸೂಚಿಸಿದ್ದೇನೆ. ಪೊಲೀಸ್ ಇಲಾಖೆ ಹಾಗೂ ಸಮುದಾಯಗಳ ಬಗ್ಗೆ ಸೌಹಾರ್ದ ವಾತಾವರಣ ಕಲ್ಪಿಸಲು ಸೂಚಿಸಿದ್ದೇನೆ ಎಂದವರು ತಿಳಿಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಸಂಜೀವ ಮಠಂದೂರು, ಯು.ಟಿ.ಖಾದರ್ ಮತ್ತಿತರರು ಉಪಸ್ಥಿತರಿದ್ದರು