ಮುಖ್ಯಮಂತ್ರಿ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಾಯ

Update: 2019-12-31 12:37 GMT

ಬೆಂಗಳೂರು, ಡಿ.31: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಸೆಲ್ವಕುಮಾರ್ ಅವರ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಯಶವಂತಪುರ ಮೇಲ್ಸೇತುವೆ ರಸ್ತೆಯಲ್ಲಿ ಮಂಗಳವಾರ ಜರುಗಿದೆ.

ಬಿ.ಎಸ್.ಯಡಿಯೂರಪ್ಪ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ತುಮಕೂರಿಗೆ ಪ್ರಯಾಣಿಸುತ್ತಿದ್ದಾಗ ಅವರ ಬೆಂಗಾವಲು ವಾಹನದ ಹಿಂದೆ ಹೋಗುತ್ತಿದ್ದ ಸೆಲ್ವಕುಮಾರ್ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಕಾರಿನಲ್ಲಿ ಸೆಲ್ವಕುಮಾರ್ ಅವರು ಇರಲಿಲ್ಲ. ಆದರೆ, ಘಟನೆಯಲ್ಲಿ ಗಾಯಗೊಂಡಿರುವ ಕಾರು ಚಾಲಕ ವಿನಯ್ ಸೇರಿ ಮೂವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಾರ ಅಸ್ತವ್ಯಸ್ತ: ಈ ಘಟನೆಯಿಂದ ಯಶವಂತಪುರ ಮೇಲ್ಸುತುವೆ ಮೇಲೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಧಾವಿಸಿ ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News