×
Ad

ಅಸಹಕಾರ ಚಳುವಳಿ-ಜನಜಾಗೃತಿ ಸಭೆಗೆ ಅನುಮತಿ: ಗೃಹಸಚಿವ ಬಸವರಾಜ ಬೊಮ್ಮಾಯಿ

Update: 2019-12-31 21:17 IST

ಮಂಗಳೂರು, ಡಿ.31: ಎನ್‌ಆರ್‌ಸಿ ಮತ್ತು ಸಿಎಎ ಕುರಿತಂತೆ ಪರವಾಗಿ ‘ಅಸಹಕಾರ ಚಳುವಳಿ’ ಮತ್ತು ವಿರೋಧವಾಗಿ ಜನಜಾಗೃತಿ ಸಭೆಗಳು ನಡೆಸಲು ಸಂಘಟನೆಗಳಿಂದ ಬೇಡಿಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅನುಮತಿ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಮುಸ್ಲಿಂ ಸೆಂಟ್ರಲ್ ಕಮಿಟಿಯ ಮುಖಂಡರು ಜ.4ರಂದು ‘ಅಸಹಕಾರ ಚಳುವಳಿ’ ನಡೆಸಲು ಮತ್ತು ಬಿಜೆಪಿ ರಾಜ್ಯ ಘಟಕವು ಜ.12ರಂದು ‘ಜನಜಾಗೃತಿ ಸಭೆ’ ನಡೆಸಲು ಮುಂದಾಗಿವೆ. ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಳಿಕ ಯಾವೊಂದು ಅಹಿತಕರ ಘಟನೆ ನಡೆದಿಲ್ಲ. ಆದರೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಪರಿಸ್ಥಿತಿ ತಿಳಿಯಾಗು ವವರೆಗೆ ಈ ಎರಡೂ ಸಭೆಗಳನ್ನು 10 ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಸಕಾರಾತ್ಮಕ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಬಸವರಾಜ ಬೊಮ್ಮಾಯಿ ನುಡಿದರು.

ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಯ ವೇಳೆ ಅಮಾಯಕರ ಬಂಧನವಾಗಿದೆ ಎಂದು ಆರೋಪಿಸಿ ಹಲವರು ದೂರು ನೀಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ತಿಳಿಸಿದ್ದೇನೆ. ನ್ಯಾಯಾಂಗ ಬಂಧನ ದಲ್ಲಿರುವವರು ಅಮಾಯಕರು ಆಗಿದ್ದರೆ ಕಾನೂನು ರೀತಿಯಲ್ಲಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅದಲ್ಲದೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೂ ನಿದೇರ್ಶನ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೋಲಿಬಾರ್ ಸಂತ್ರಸ್ತರಿಗೆ ಪರಿಹಾರ ವಾಪಸ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಪ್ರಕರಣದ ತನಿಖೆ ನಡೆಯು ತ್ತಿದೆ. ತನಿಖಾ ವರದಿಯ ಆಧಾರದಲ್ಲಿ ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಹಾಗೂ ಸಮು ದಾಯಗಳ ಬಗ್ಗೆ ಸೌಹಾರ್ದ ವಾತಾವರಣ ಕಲ್ಪಿಸಲು ಸೂಚಿಸಿದ್ದೇನೆ ಎಂದರು.

ಗಲಭೆಯ ಬಳಿಕ ನಡೆಯುವ ಶಾಂತಿಸಭೆಗಳು ಅರ್ಥ ಕಳೆದುಕೊಳ್ಳುತ್ತಿವೆ. ಇದರಿಂದ ಯಾವ ಪ್ರಯೋಜನವೂ ಕಂಡುಬರುತ್ತಿಲ್ಲ ಎಂದು ಪತ್ರಕರ್ತರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಗೃಹ ಸಚಿವರು ವಾರ್ಡ್ ಮಟ್ಟದಲ್ಲಿ ಶಾಂತಿ ಸಭೆ ನಡೆಸಲು ಸೂಚಿಸಿ ದ್ದೇನೆ ಎಂದರು.

ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಿಷೇಧಕ್ಕೆ ಚಿಂತನೆ: ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೆ ಟ್ರಾಫಿಕ್ ಸಮಸ್ಯೆ ತೀವ್ರವಾಗುತ್ತಿದೆ. ಆ ಹಿನ್ನಲೆಯಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆಗೆ ಅವಕಾಶ ನೀಡದಿರಲು ಈ ಹಿಂದೆ ನಿರ್ಧರಿಸಲಾಗಿತ್ತು. ಈ ಬಗ್ಗೆ ಸರಕಾರದ ನಿಲುವು ಏನು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಬೆಂಗಳೂರಿನ ಮಾದರಿಯಲ್ಲೇ ಮಂಗಳೂರಿನಲ್ಲಿ ನಿರ್ದಿಷ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡುವ ಬಗ್ಗೆ ಚರ್ಚೆ ಮಾಡಲಾಗುವುದು. ಆ ಬಳಿಕ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಿಷೇಧ ಹೇರಲು ಚಿಂತನೆ ನಡೆಸಲಾಗುವುದು ಎಂದರು.

ಪರಿಹಾರ ವಿತರಣೆಗೆ ಸಂಬಂಧಿಸಿ ನಿಯಮಾವಳಿ: ಗೋಲಿಬಾರ್ ಮತ್ತಿತರ ಸಂದರ್ಭ ಬಲಿಯಾದ ಅಥವಾ ಗಾಯಾಳುಗಳ ಕುಟುಂಬಗಳಿಗೆ ಪರಿಹಾರ ಧನ ವಿತರಣೆಗೆ ಸಂಬಂಧಿಸಿ ಗೊಂದಲ ಸೃಷ್ಟಿಯಾಗುವುದನ್ನು ತಪ್ಪಿಸಲು ಸೂಕ್ತ ನಿಯಮಾವಳಿಯನ್ನು ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾದ ಯುಟಿ ಖಾದರ್, ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ್ ಪೂಂಜಾ, ಎಸ್. ಅಂಗಾರ, ರಾಜೇಶ್ ನಾಯಕ್ ಉಳೆಪ್ಪಾಡಿಗುತ್ತು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News