ಗ್ರಾಪಂ ಪಿಡಿಓ ಹುದ್ದೆ ಮೇಲ್ದರ್ಜೆಗೇರಿಸಲು ಆಗ್ರಹ
ಉಡುಪಿ, ಜ.3: ಗ್ರಾಪಂಗಳ ಅಧಿಕಾರ ವಿಕೇಂದ್ರೀಕರಣವನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮತ್ತು ಗ್ರಾಮ ಮಟ್ಟದಲ್ಲಿ ಸರಕಾರದ ಯೋಜನೆ, ಕಾರ್ಯಕ್ರಮಗಳ ಸಮನ್ವಯ ಮತ್ತು ಅನುಷ್ಠಾನಕ್ಕೆ ಪೂರಕವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಬಿ ದರ್ಜೆಗೇರಿಸಲು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ಹುದ್ದೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯತೆ ಕುರಿತು ವಿವರಿಸಿ, ಪಂಚಾಯತ್ ಅಧಿಕಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ವಿನಂತಿಸಿದರು.
ಸಂಘದ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಮಾತನಾಡಿ, ಕೆಡಿಪಿ ಸಬೆಯನ್ನು ನಡೆಸುವ ಮಹತ್ವದ ಅಧಿಕಾರ ಪಂಚಾಯತ್ಗಳಿಗೆ ಲಭ್ಯವಾಗಿದ್ದು, ಇದರಿಂದ ಇಲಾಖಾ ಸಮನ್ವಯತೆ ಹಾಗೂ ಪಂಚಾಯತ್ಗಳಿಗೆ ಹೆಚ್ಚಿನ ಆರ್ಥಿಕ ಅಧಿಕಾರ ಪ್ರಾಪ್ತಯಾಗಿದೆ. ಇದರ ವ್ಯವಸ್ಥಿತ ನಿರ್ವಹಣೆ ಹಾಗೂ ಈ ಕುರಿತ ಹಲವು ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಹುದ್ದೆ ಮೇಲ್ದರ್ಜೆಗೇರಿಸುವುದು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರಕಾರ ಪೂರಕ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.
ಮನವಿ ಆಲಿಸಿದ ಸಚಿವರು ಈ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸುವುದಾಗಿ ತಿಳಿಸಿದರಲ್ಲದೇ,ಪಂಚಾಯತ್ಗಳಲ್ಲಿ ಸೋಲಾರ್ ಅಳವಡಿಕೆ ಹಾಗೂ ತ್ಯಾಜ್ಯ ನಿರ್ವಹಣೆ ವಿಷಯದಲ್ಲಿ ಹೆಚ್ಚು ಆದ್ಯತೆ ನೀಡಿ ಅನುಷ್ಠಾನ ಗೊಳಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿಪಂ, ತಾಪಂ ಸದಸ್ಯರು, ತಾಪಂ ಕಾರ್ಯನಿರ್ವಹಣಾಧಿಕಾರಿ ಮೇಜರ್ ಹರ್ಷ ಕೆ., ಜಿಲ್ಲಾ ಸಂಘದ ಕಾರ್ಯದರ್ಶಿ ಮಹೇಶ್, ಉಡುಪಿ ತಾಲೂಕು ಸಂಘದ ಅಧ್ಯಕ್ಷ ಅನಿಲ್ ಕುಮಾರ್, ಕಾರ್ಕಳ ತಾಲೂಕು ಸಂಘದ ಅಧ್ಯಕ್ಷ ಸದಾಶಿವ ಹಾಗೂ ಇತರರು ಉಪಸ್ಥಿತರಿದ್ದರು.