​ಜ.5: ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

Update: 2020-01-03 18:16 GMT

ಮಂಗಳೂರು, ಜ.2: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ದ.ಕ. ಜಿಪಂ, ಸುಳ್ಯ ತಾಪಂ ಮತ್ತು ಮಡಪ್ಪಾಡಿ ಗ್ರಾಪಂ ಸಹಭಾಗಿತ್ವದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಜ.5ರಂದು ಸುಳ್ಯದ ಮಡಪ್ಪಾಡಿ ಸರಕಾರಿ ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.

ಈ ಸಂದರ್ಭ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದಿಂದ ರಕ್ತ ಗುಂಪು ವರ್ಗಿಕರಣ, ರಕ್ತದಾನ ಶಿಬಿರ, ಪುತ್ತೂರು ಅಂಚೆ ವಿಭಾಗದ ವತಿಯಿಂದ ಆಧಾರ್ ನೋಂದಣಿ, ತಿದ್ದುಪಡಿ ಸೌಲಭ್ಯ ಮತ್ತಿತರ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ವತಿಯಿಂದ ಅರಿವು ಕಾರ್ಯಕ್ರಮ,ವಿವಿಧ ಸರಕಾರಿ ಇಲಾಖೆಯ ಮಾಹಿತಿ ಸ್ಟಾಲ್ಗಳು,ಲೀಡ್‌ಬ್ಯಾಂಕ್ ಮಾಹಿತಿ ಕೇಂದ್ರ ಕೂಡಾ ತೆರಯಲಾಗುತ್ತಿದೆ.

ಅಂತರ್ಜಲ ವೃದ್ಧಿ, ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ರೂಪಿಸುವುದು ಪ್ರಮುಖ ಉದ್ದೇಶವಾಗಿದೆ. ಮಡಪ್ಪಾಡಿ ಗ್ರಾಪಂ ಅಸ್ತಿತ್ವಕ್ಕೆ ಬಂದು 25 ವರ್ಷಗಳಾಗಿವೆ. ಗ್ರಾಮ ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಪತ್ರಕರ್ತರ ಸಂಘ ವಿಶೇಷ ಕಾಳಜಿ ವಹಿಸಲಿದೆ. ಈ ಬಾರಿಯ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಪತ್ರಕರ್ತರು, ರಾಜ್ಯ ಮತ್ತು ರಾಷ್ಟ್ರೀಯ ಪತ್ರಕರ್ತ ಸಂಘಟನೆಯ ನಾಯಕರು ಭಾಗವಹಿಸಲಿದ್ದಾರೆ.

ಪತ್ರಕರ್ತರ ಗ್ರಾಮ ವಾಸ್ತವ್ಯವನ್ನು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಉದ್ಘಾಟಿಸಲಿದ್ದಾರೆ. ಶಾಸಕ ಅಂಗಾರ ವೈದ್ಯಕೀಯ ಶಿಬಿರ ಉದ್ಘಾಟಿಸಲಿದ್ದಾರೆ. ಕುತ್ಲೂರು ಗ್ರಾಮ ವಾಸ್ತವ್ಯದ ಮಾಹಿತಿ ಪುಸ್ತಕವನ್ನು ಮಾಜಿ ಸಚಿವ ಯು.ಟಿ.ಖಾದರ್ ಬಿಡುಗಡೆಗೊಳಿಸಲಿದ್ದಾರೆ. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.

ಪೂ.11ರಿಂದ 12 ತನಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿ.ಪಂ.ಸಿಇಒ ಡಾ.ಆರ್.ಸೆಲ್ವಮಣಿ ಉಪಸ್ಥಿತಿಯಲ್ಲಿ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಸಂವಾದ ನಡೆಯಲಿದೆ. ಆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ 2 ಗಂಟೆಯಿಂದ 3 ತನಕ ಸ್ಥಳೀಯರೊಂದಿಗೆ ಪತ್ರಕರ್ತರ ಸಂವಾದ, ಆ ಬಳಿಕ ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರ ಸಂವಾದ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮದ ಹಿರಿಯರೊಂದಿಗೆ ಪತ್ರಕರ್ತರ ಚಾವಡಿ ಚರ್ಚೆ, ಗ್ರಾಮ ವಾಸ್ತವ್ಯ ನಡೆಯಲಿದೆ ಎಂದು ದ.ಕ.ಜಿಲ್ಲಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News