ಸಂಸದರ ಆದರ್ಶ ಗ್ರಾಮ ಯೋಜನೆಗೆ ಸುಮಲತಾ ಚಾಲನೆ

Update: 2020-01-03 18:19 GMT

ಮಂಡ್ಯ, ಜ.3: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆ ಸಂಸದರ ಆದರ್ಶ ಗ್ರಾಮ ಯೋಜನೆಗೆ ಬೆಸಗರಹಳ್ಳಿ ಗ್ರಾಮ ಆಯ್ಕೆಯಾಗಿದ್ದು, ಶುಕ್ರವಾರ ಸಂಸದೆ ಸುಮಲತಾ ಅಂಬರೀಷ್ ಚಾಲನೆ ನೀಡಿದರು.

ಗ್ರಾಮದ ಸಮುದಾಯಭವನದಲ್ಲಿ ನಡೆದ ಗ್ರಾಮಸ್ಥರ ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ, ಸುಮಲತಾ ಗ್ರಾಮಸ್ಥರಿಂದ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಸಗರಹಳ್ಳಿ ಗ್ರಾಮದಲ್ಲಿ ಕೈಗೊಳ್ಳಬಹುದಾದ ಯೋಜನೆಗಳನ್ನು ಅನುಷ್ಠಾನಗೊಳಿಸಲು ನಿಮ್ಮೆಲ್ಲರ ಸಹಕಾರ ಅಗತ್ಯವಿದೆ. ಇನ್ನೂ ಐದು ವರ್ಷಗಳಲ್ಲಿ ಮಾದರಿ ಗ್ರಾಮ ಮಾಡಲು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ರಸ್ತೆ, ಚರಂಡಿ, ಸ್ವಚ್ಛತೆ, ಪ್ಲಾಸ್ಟಿಕ್ ನಿಷೇಧ, ಸಮರ್ಪಕ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು. ಅದರಂತೆ ವಿವಿಧ ಇಲಾಖೆಗಳಿಂದ ಬರುವ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಸ್ವಚ್ಛ ಭಾರತ ಅಭಿಯಾನ ಕೇಂದ್ರ ಸರಕಾರ ಕಳೆದ ಐದು ವರ್ಷಗಳಿಂದ ನಡೆಸುತ್ತಾ ಬಂದಿದೆ. ಆದರೆ, ಇನ್ನೂ ಸ್ವಚ್ಛತೆಗೆ ಆದ್ಯತೆ ನೀಡಿಲ್ಲ. ಅಶುಚಿತ್ವದಿಂದ ರೋಗರುಜಿನಗಳು ಬರಲಿವೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಗೆ ಮುಂದಾಗಬೇಕು. ಇದು ನಮ್ಮ ಕೆಲಸವೆಂಬಂತೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಗ್ರಾಮದ ಸಮಸ್ಯೆಗಳನ್ನು ತಿಳಿದುಕೊಂಡು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಿ ಶೀಘ್ರವಾಗಿ ಬಗೆಹರಿಸಲು ಪ್ರಯತ್ನಿಸುವುದ ಮೂಲಕ ಈ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಜಿಪಂ ಸದಸ್ಯ ಮರಿಹೆಗಡೆ, ತಾಪಂ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ಬಿ.ಎಂ.ರಘು, ಸದಸ್ಯೆ ಆಶಾಗೋಪಿ, ಗ್ರಾಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಶಫಿನಾಜ್, ಜಿಪಂ ಮಾಜಿ ಅಧ್ಯಕ್ಷ ಬಿ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಕೆ.ಯಾಲಕ್ಕಿಗೌಡ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News