ಸೋಮಶೇಖರ ರೆಡ್ಡಿ ಬಂಧನಕ್ಕೆ ಪೊಲೀಸರ ಮೀನಾಮೇಷ: ಕೆ.ಸಿ.ಕೊಂಡಯ್ಯ ಆಕ್ರೋಶ

Update: 2020-01-05 12:05 GMT

ಬಳ್ಳಾರಿ, ಜ. 5: ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಇನ್ನೂ ಬಂಧಿಸದೆ ಪೊಲೀಸರು ಏಕೆ ಕೈಕಟ್ಟಿ ಕುಳಿತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಸಿ.ಕೊಂಡಯ್ಯ ಪ್ರಶ್ನಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸೋಮಶೇಖರ ರೆಡ್ಡಿ ನಗರದ ರಾಯಲ್ ವೃತ್ತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಪ್ರತಿಭಟನೆ ವೇಳೆ ಸಾರ್ವಜನಿಕ ಸಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಆದರೂ, ಸರಕಾರ ಮೌನಕ್ಕೆ ಶರಣಾಗಿದೆ ಎಂದು ದೂರಿದರು.

ಯಾವುದೇ ಸಂಬಂಧವಿಲ್ಲದ ಕಾಂಗ್ರೆಸ್ ಪಕ್ಷದ ಶಾಸಕ ಯು.ಟಿ.ಖಾದರ್ ವಿರುದ್ಧ ಮಂಗಳೂರಿನಲ್ಲಿ ಕೇಸು ದಾಖಲು ಮಾಡುವ ಬಿಜೆಪಿ ಸರಕಾರ, ಸೋಮಶೇಖರ ರೆಡ್ಡಿ ವಿರುದ್ಧ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೆ.ಸಿ.ಕೊಂಡಯ್ಯ ವಾಗ್ದಾಳಿ ನಡೆಸಿದರು.

ಕಾನೂನಿನ ಮೇಲೆ ಕನಿಷ್ಟ ಗೌರವವಿದ್ದರೆ ಈ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಸೋಮಶೇಖರ ರೆಡ್ಡಿ ಬಂಧನಕ್ಕೆ ಕ್ರಮ ಕೈಗೊಳ್ಳಬೇಕೆಂದು ಕೋರಿ ಪಕ್ಷದ ನಿಯೋಗದಿಂದ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಆಂಜನೇಯಲು, ಸೂರ್ಯನಾರಾಯಣರೆಡ್ಡಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News