ಹಿಂದೂಗಳು 50 ಮಕ್ಕಳನ್ನು ಹೆರಬೇಕು ಎಂಬ ಹೇಳಿಕೆ: ಸೋಮಶೇಖರ್ ರೆಡ್ಡಿ ಚಿತ್ರಕ್ಕೆ ಪೊರಕೆಯಿಂದ ಹೊಡೆದ ಮಹಿಳೆಯರು

Update: 2020-01-05 13:46 GMT

ಬೆಂಗಳೂರು, ಜ.5: ಹಿಂದೂಗಳು 50 ಮಕ್ಕಳನ್ನು ಹೆರಬೇಕು, ಜನಸಂಖ್ಯೆ ಹೆಚ್ಚಿಸಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸೋಮಶೇಖರ್ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯರು, ಅವರ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ರವಿವಾರ ಇಲ್ಲಿನ ಮೌರ್ಯವತ್ತದ ಗಾಂಧಿ ಪ್ರತಿಮೆ ಎದುರು ಕೆಪಿಸಿಸಿ ಬೆಂಗಳೂರು ನಗರ ಜಿಲ್ಲಾ ಪ್ರಚಾರ ಸಮಿತಿ ನೇತತ್ವದ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು,  ಮಹಿಳೆಯರು, ಸ್ತ್ರೀಕುಲದ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಬಿಜೆಪಿ ಶಾಸಕನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಮನೋಹಲ್, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರದ ಸಚಿವರು ಹಾಗೂ ಶಾಸಕರು ಉದ್ದೇಶ ಪೂರ್ವಕವಾಗಿ ಕೋಮುಗಲಭೆ ಹಾಗೂ ಅಶಾಂತಿ ಸಷ್ಟಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ಬಿಜೆಪಿ ಸರಕಾರವೇ ಕುಮ್ಮಕ್ಕು ನೀಡುತ್ತಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳು ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ, ನಿರುದ್ಯೋಗ ಹಾಗೂ ಅನೇಕ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ವಿಫಲವಾಗಿ ಉದ್ದೇಶಪೂರ್ವಕವಾಗಿ ದೇಶದ ಜನರ ಗಮನವನ್ನು ಬೇರೆಡೆ ಸೆಳೆಯಲು ಸಿಎಎ ಹಾಗೂ ಎನ್‌ಆರ್‌ಸಿ ಪರ ಕೇಂದ್ರ ಸರಕಾರ ಹೋರಾಟ ನಡೆಸುತ್ತಿದೆ ಎಂದು ದೂರಿದರು.

ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ಭಾರತೀಯ. ಇದರಲ್ಲಿ ಯಾವುದೇ ರೀತಿಯ ಸಂಶಯವೂ ಇಲ್ಲ. ಆದರೆ, ಸರಕಾರದ ಬಿಜೆಪಿ ಮುಖಂಡರು ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಗಳು ಹಿಂದೂ ಮುಸ್ಲಿಂ ಎಂಬ ಭೇದ ಭಾವದ ಭಾವನೆಗಳನ್ನು ಸಷ್ಟಿಸಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿವೆ ಎಂದು ಹೇಳಿದರು.

ಬಿಜೆಪಿ ಶಾಸಕರು ಹಾಗೂ ಸಚಿವರ ಹೇಳಿಕೆಗಳನ್ನು ರಾಜ್ಯ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಗಮನಿಸಿ ಅವರ ವಿರುದ್ಧ ಮೊಕದ್ದಮೆಗಳನ್ನು ದಾಖಲಿಸಬೇಕು. ಹಾಗೂ ಶಾಸಕ ಸೋಮಶೇಖರ ರೆಡ್ಡಿ, ಅವರನ್ನು ಬಂಧಿಸಬೇಕೆಂದು ಒತ್ತಾಯ ಮಾಡಿದರು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಜನಾರ್ಧನ್, ಎ.ಆನಂದ್, ಈ. ಶೇಖರ್, ಎಂ.ಎ.ಸಲೀಂ, ಜಯಸಿಂಹ, ಪುಟ್ಟರಾಜು, ಆಶಾರಾಜ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News