ಪೌರತ್ವ ಕಾಯ್ದೆಯ ಹೆಸರಿನಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುತ್ತಿದೆ: ಶಾಸಕ ಕಾಮತ್
ಮಂಗಳೂರು, ಜ.8: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಪೌರತ್ವ ಕಾಯ್ದೆ ಬೆಂಬಲಿಸಿ ಪೋಸ್ಟ್ ಕಾರ್ಡ್, ಸಹಿ ಸಂಗ್ರಹ ಅಭಿಯಾನಕ್ಕೆ ಮಂಗಳಾದೇವಿ ದೇವಸ್ಥಾನದ ಬಳಿ ಶಾಸಕ ಡಿ.ವೇದವ್ಯಾಸ್ ಕಾಮತ್ ಚಾಲನೆ ನೀಡಿದರು.
ಸರಕಾರದ ಈ ಕಾಯ್ದೆಯಿಂದ ಇಲ್ಲಿನ ಮೂಲ ನಿವಾಸಿಗಳಿಗೆ ಏನೂ ಸಮಸ್ಯೆಯಾಗುವುದಿಲ್ಲ. ಆದರೆ ಅರೆ ಪಕ್ವ ಕಾಂಗ್ರೆಸ್ ನಾಯಕರು ಕಾಯ್ದೆಯ ಕುರಿತು ಅರಿಯದೆ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಪಾಕ್, ಬಾಂಗ್ಲಾ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿರುವ ಹಿಂದೂ, ಸಿಖ್, ಜೈನ, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯದವರಿಗೆ ಭಾರತದಲ್ಲಿ ಬದುಕಲು ಪೌರತ್ವ ನೀಡುವುದು ಈ ಕಾಯ್ದೆಯ ಉದ್ದೇಶವಾಗಿದೆ. ಆದರೆ ಎಲ್ಲಾ ಹಂತದಲ್ಲೂ ವೈಫಲ್ಯ ಕಂಡಿರುವ ಕಾಂಗ್ರೇಸ್ ಪಕ್ಷವು ಅಲ್ಪ ಸಂಖ್ಯಾತರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಲು ಪುಕಾರೆಬ್ಬಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ಸಿನ ಅಗ್ರಗಣ್ಯ ನಾಯಕರೆಲ್ಲರೂ ಪೌರತ್ವ ಕಾಯ್ದೆಯನ್ನು ತಿದ್ದುಪಡಿಗೊಳಿಸಬೇಕೆಂದು ಹೇಳಿರುವುದನ್ನು ಕಾಂಗ್ರೆಸಿಗರು ಮರೆತಿರಬಹುದು ಆದರೆ ಭಾರತೀಯರು ಮರೆಯುವುದಿಲ್ಲ ಎಂದಿದ್ದಾರೆ.
ಕಾಯ್ದೆಯನ್ನು ಬೆಂಬಲಿಸಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪೋಸ್ಟ್ ಕಾರ್ಡ್ ಅಭಿಯಾನದ ಮೂಲಕ ಕೇಂದ್ರ ಸರಕಾರದ ನಿರ್ಧಾರವನ್ನು ಬೆಂಬಲಿಸಲಿದ್ದೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದರು.