ಸೋಮಶೇಖರ್ ರೆಡ್ಡಿ ಬಂಧನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕ್ರಾಂತಿ ಸೇನೆ ಧರಣಿ

Update: 2020-01-16 07:30 GMT

ಬೆಂಗಳೂರು, ಜ.16: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ -ಸಮಾಜದಲ್ಲಿ ಅಶಾಂತಿ ಕದಡುವ ಪ್ರಯತ್ನಕ್ಕೆ ಕೈಹಾಕಿದ್ದು,  ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕ್ರಾಂತಿ ಸೇನೆ ಸದಸ್ಯರು ಗುರುವಾರ ಧರಣಿ ನಡೆಸಿದರು.

ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ, ಸೇನೆ ಕಾರ್ಯಕರ್ತರು, ಸೋಮಶೇಖರ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ಗೌರವ ತರುವಂತಹ ಮಾತನಾಡಬೇಕು. ಅವರ ಹೇಳಿಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸೇನೆ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸೈಫುಲ್ಲಾ, ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಸಭೆಯೊಂದರಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಸೌಹಾರ್ದ ಹಾಳು ಮಾಡುವ ಉದ್ದೇಶದಿಂದ ಅವರು ಮಾತನಾಡಿದ್ದರೂ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಅವರನ್ನು ಬಂಧಿಸಿಲ್ಲ ಎಂದು ದೂರಿದರು.

ಸಮಾಜದಲ್ಲಿ ಅಶಾಂತಿ ಕದಡುವ, ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುವ ಇಂತಹ ಹೇಳಿಕೆ ಖಂಡನೀಯ ಎಂದ ಅವರು, ಸೋಮಶೇಖರ ರೆಡ್ಡಿಯವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News