ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ: ಎಫ್‌ಐಆರ್, ಚಾರ್ಜ್‌ಶೀಟ್ ರದ್ದು ಕೋರಿ ಶಾಸಕ ಗಣೇಶ್ ಹೈಕೋರ್ಟ್‌ಗೆ ಅರ್ಜಿ

Update: 2020-01-16 15:08 GMT

ಬೆಂಗಳೂರು, ಜ.16: ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಆನಂದ್‌ಸಿಂಗ್ ಜೊತೆ ರಾಜಿ ಸಂಧಾನ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ರದ್ದುಕೋರಿ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ವೇಳೆ ಬಿಡದಿ ಸಮೀಪದ ಈಗಲ್‌ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮಧ್ಯೆ ಗಲಾಟೆ ನಡೆದಿತ್ತು. ಆ ವೇಳೆ ಆನಂದ್ ಸಿಂಗ್ ಕಣ್ಣಿನ ಭಾಗಕ್ಕೆ ಗಾಯವಾಗಿ ಆಸ್ಪತ್ರೆ ಸೇರಿದ್ದರು.

ಬಳಿಕ ಜೆ.ಎನ್.ಗಣೇಶ್ ನನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ಬಳಿಕ ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಜನಪ್ರತಿನಿಧಿಗಳ ವಿಶೇಷ ಕೆರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಈಗ ದೂರುದಾರ ಆನಂದ್‌ಸಿಂಗ್ ಜೊತೆ ರಾಜಿ ಸಂಧಾನವಾಗಿದೆ. ಹೀಗಾಗಿ, ಪ್ರಕರಣ ಹಾಗೂ ಚಾರ್ಜ್‌ಶೀಟ್ ರದ್ದುಗೊಳಿಸಬೇಕೆಂದು ಗಣೇಶ್ ಕೋರ್ಟ್ ಮೆಟ್ಟಿಲೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News