ಮಡಿಕೇರಿ: ಕಂದಾಯಾಧಿಕಾರಿಗಳ ಸಭೆ; ಅಂಗನವಾಡಿಗಳಿಗೆ ಜಾಗ ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

Update: 2020-01-16 16:21 GMT

ಮಡಿಕೇರಿ,ಜ.16 : ಅಂಗನವಾಡಿ ಕಟ್ಟಡಗಳ ನಿರ್ಮಾಣ ಸಂಬಂಧ ಇನ್ನೂ ಹಲವು ಅಂಗನವಾಡಿಗಳಿಗೆ ಜಾಗ ನೀಡಬೇಕಿದ್ದು, ಕೂಡಲೇ ಜಾಗ ಗುರುತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿ ಅವರು ಕಂದಾಯ ನಿರೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ. 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಪಶುಪಾಲನಾ ಇಲಾಖೆಯ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಿವೇಶನ ನೀಡಲಾಗಿದ್ದು, ಆದರೆ ಆರ್‍ಟಿಸಿ ಒದಗಿಸಿರುವುದಿಲ್ಲ. ಆದ್ದರಿಂದ ಆರ್‍ಟಿಸಿಯನ್ನು ತಕ್ಷಣವೇ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿಲ್ಲೆಯಲ್ಲಿ 871 ಅಂಗನವಾಡಿಗಳಿದ್ದು, ಈಗಾಗಲೇ 720 ಅಂಗನವಾಡಿಗಳಿಗೆ ಸ್ವಂತ ಕಟ್ಟಡವಿದೆ. ಉಳಿದಂತೆ ಶಾಲೆಗಳಲ್ಲಿ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಸದ್ಯ 28 ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಸ್ವಂತ ಜಾಗ ಗುರುತಿಸುವ ನಿಟ್ಟಿನಲ್ಲಿ ಪ್ರಗತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ ಅವರು ಮಾಹಿತಿ ನೀಡಿದರು.

ಆದಿವಾಸಿ ಭವನ ಸೇರಿದಂತೆ ಗಿರಿಜನರ ಶ್ರೇಯೋಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವಂತೆ ಕಂದಾಯ ನಿರೀಕ್ಷಕರಿಗೆ ಸೂಚಿಸಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ವಿವಿಧ ಇಲಾಖೆ ವ್ಯಾಪ್ತಿಗಳಿಗೆ ಸಂಬಂಧಿಸಿದಂತೆ ನಿವೇಶನ ಒದಗಿಸುವುದು. ನಿವೇಶನ ಒದಗಿಸಿದ್ದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸೂಚಿಸಿದರು. 

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ತಹಶೀಲ್ದಾರರಾದ ಮಹೇಶ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಹಲವು ಮಾಹಿತಿ ನೀಡಿದರು. ಶಿರಸ್ತೆದಾರ್ ಪ್ರಕಾಶ್, ಕಂದಾಯ ನಿರೀಕ್ಷಕರು ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News