ಪ್ರಜ್ವಲ್ ರೇವಣ್ಣ ಆಯ್ಕೆ 'ಅಸಿಂಧು' ವಿಚಾರ: ಎ.ಮಂಜು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Update: 2020-01-17 17:08 GMT

ಬೆಂಗಳೂರು, ಜ.17: ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಲು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ.ಮಂಜು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ, ತಾಂತ್ರಿಕ ಕಾರಣ ನೀಡಿ ಅರ್ಜಿಯನ್ನು ವಜಾಗೊಳಿಸಿತು. ಚುನಾವಣಾ ಅಕ್ರಮದ ಆರೋಪ ಮಾಡುವಾಗ ಅರ್ಜಿದಾರರು ಪ್ರಮಾಣ ಪತ್ರ ಸಲ್ಲಿಸಬೇಕು. ಆದರೆ, ಎ.ಮಂಜು ಪ್ರಮಾಣ ಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ.

ಪ್ರಜ್ವಲ್ ಪರ ವಕೀಲ ಎಂ.ಕೇಶವರೆಡ್ಡಿ ಅವರು, ಎ.ಮಂಜು ನಿಯಮಾನುಸಾರ ದಾಖಲೆ ಸಲ್ಲಿಸಿಲ್ಲ ಎಂದು ಆಕ್ಷೇಪ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಕಳೆದ ಲೋಕಾಸಭಾ ಚುನಾವಣೆ ವೇಳೆ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ ಅರೋಪವನ್ನು ಪ್ರಜ್ವಲ್ ರೇವಣ್ಣ ಮೇಲೆ ಎ.ಮಂಜು ಹೊರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News