'ಯಡಿಯೂರಪ್ಪ ನಿವೃತ್ತಿ' ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಬಿಜೆಪಿ ಶಾಸಕ ಯತ್ನಾಳ್ ಪ್ರತಿಕ್ರಿಯೆ

Update: 2020-01-20 13:14 GMT

ಬಾಗಲಕೋಟೆ, ಜ. 20: ‘ರಾಜ್ಯದಲ್ಲಿ ಯಡಿಯೂರಪ್ಪ ಅಂದರೆ ಬಿಜೆಪಿ, ಬಿಜೆಪಿ ಅಂದರೆ ಯಡಿಯೂರಪ್ಪ. ಅವರ ನಿವೃತ್ತಿ ವಿಚಾರದ ಬಗ್ಗೆ ಆರೆಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವೈಯಕ್ತಿಕ ಅಭಿಪ್ರಾಯ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ಆರೆಸೆಸ್ಸ್ ಹಿರಿಯ ಮುಖಂಡರು. ಸಹಜವಾಗಿಯೇ ಬಿಜೆಪಿ ಸಿದ್ಧಾಂತದ ಬಗ್ಗೆ ಹೇಳಿದ್ದಾರೆ. ಪಕ್ಷದಲ್ಲಿ ಎಪ್ಪತ್ತೈದು ವರ್ಷಕ್ಕೆ ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದರು.

ಎಪ್ಪತ್ತೈದು ವರ್ಷ ದಾಟಿದವರನ್ನು ಪಕ್ಷ ರಾಜ್ಯಪಾಲರನ್ನಾಗಿಸಬಹುದು, ಬೇರೆ ಹುದ್ದೆಯನ್ನೂ ನೀಡಬಹುದು. ಯಾರು ಮುಖ್ಯಮಂತ್ರಿ, ಪ್ರಧಾನಿ ಆಗಬೇಕು ಎನ್ನುವುದನ್ನು ಪಕ್ಷ ನಿರ್ಣಯ ಮಾಡುತ್ತದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ತಪ್ಪೇನಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಒಂದೇ ವೇದಿಕೆಯಲ್ಲಿ ಪಾಲ್ಗೊಂಡಿದ್ದು ತಪ್ಪೇನಿಲ್ಲ. ಮೂವರು ತಮ್ಮ ತಮ್ಮ ಪಕ್ಷದ ಸಿದ್ಧಾಂತಕ್ಕೆ ಬದ್ಧ. ಸಮುದಾಯದ ಕಾರ್ಯಕ್ರಮಗಳೇ ಬೇರೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News