ಕಾ ಎಂಬ ಅಪಶಕುನ, ಎನ್‌ಆರ್‌ಸಿ, ಎನ್‌ಪಿಆರ್ ಎಂಬ ಸಂಚು

Update: 2020-01-20 18:37 GMT

ನಮ್ಮ ಸಂವಿಧಾನಕ್ಕೆ ಒಂದು ಚರಿತ್ರೆ ಇದೆ. ಹಾಗೇನೆ ಒಂದು ಚಾರಿತ್ರ್ಯ ಕೂಡ ಇದೆ. ಚಾರಿತ್ರ್ಯ ಎಂದರೆ ಶೀಲ. ಬುದ್ಧನ ಪಂಚಶೀಲದಂತೆ ನಮ್ಮ ಸಂವಿಧಾನಕ್ಕೂ ಪಂಚಶೀಲಗಳಿವೆ. ಅವು- ಸಾರ್ವಭೌಮತ್ವ, ಸಮಾಜವಾದಿ, ಧರ್ಮನಿರಪೇಕ್ಷ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯ. ಸಂವಿಧಾನದ ಶೀಲಗಳಲ್ಲಿ ಒಂದಾದ Secular ಅಂದರೆ ಜಾತ್ಯತೀತ/ ಮತಧರ್ಮ ನಿರಪೇಕ್ಷ ಮೌಲ್ಯವು ಆಳ್ವಿಕೆಗೆ ಜಾತಿಮತಧರ್ಮಗಳ ವಾಂಛೆ ಇರಬಾರದು ಎನ್ನುತ್ತದೆ. ಜಾಗತಿಕವಾಗಿ ಭಾರತದ ಗೌರವವನ್ನು ಹೆಚ್ಚಿಸಿದ ಮೌಲ್ಯ ಇದು. ಆದರೆ ಇಂದು ಈ ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನವನ್ನು ನೇರವಾಗಿ ವಿರೋಧಿಸದೆ ಸಂವಿಧಾನದ ಬೇರುಗಳನ್ನು ಕತ್ತರಿಸುತ್ತದೆ. ಇದು ಭಾರತಕ್ಕೆ ಕೇಡು, ಅಪಶಕುನ ಎರಡೂ ಹೌದು.

ಇಂದು ‘CAA... ಕಾ’ ಕೂಗಿಗೆ ದೇಶ ಬೆಚ್ಚಿ ಬಿದ್ದಿದೆ. ಭಾರತೀಯ ಸುಪ್ತ ಮನಸ್ಸಲ್ಲಿ, ಗತಿಸಿದ ಪಿತೃಗಳು ತಿಥಿಯ ಸಂದರ್ಭದಲ್ಲಿ ಕಾಗೆಯ ರೂಪದಲ್ಲಿ ಬಂದು ಆಹಾರ ಸೇವಿಸುತ್ತಾರೆ ಎಂಬ ನಂಬಿಕೆ ಇದೆ. ಹಾಗೆಯೇ ಕಾಗೆಯು ಮುಂಬರುವ ಕೇಡು-ಅಪಶಕುನದ ಸೂಚನೆ ನೀಡಲು ‘‘ಕಾ...ಕಾ’’ ಶಬ್ದ ಮಾಡಿ ಎಚ್ಚರಿಸುತ್ತದೆ ಎಂದು ಭಾರತದ ಸುಪ್ತ ಮನಸ್ಸು ಭಾವಿಸುತ್ತದೆ. ಈ ಪೌರತ್ವ ತಿದ್ದುಪಡಿ ಕಾಯ್ದೆ CAA ಎಂಬುದು ಕಾಗೆಯ ‘ಕಾ’ ಕೂಗಿನಂತೂ ಧ್ವನಿಸುತ್ತಾ, ಏನೋ ಅಪಶಕುನ, ಏನೋ ಕೇಡಿನ ಸೂಚನೆ ಎಂಬಂತೆ ಭಾರತದ ಅಂತರಾತ್ಮಕ್ಕೆ ಅನ್ನಿಸತೊಡಗಿದೆ. ಈಗ ನೋಡಿ, ನಮ್ಮ ಸಂವಿಧಾನಕ್ಕೆ ಒಂದು ಚರಿತ್ರೆ ಇದೆ. ಹಾಗೇನೆ ಒಂದು ಚಾರಿತ್ರ್ಯ ಕೂಡ ಇದೆ. ಚಾರಿತ್ರ್ಯ ಎಂದರೆ ಶೀಲ. ಬುದ್ಧನ ಪಂಚಶೀಲದಂತೆ ನಮ್ಮ ಸಂವಿಧಾನಕ್ಕೂ ಪಂಚಶೀಲಗಳಿವೆ. ಅವು- ಸಾರ್ವಭೌಮತ್ವ, ಸಮಾಜವಾದಿ, ಧರ್ಮನಿರಪೇಕ್ಷ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯ. ಸಂವಿಧಾನದ ಶೀಲಗಳಲ್ಲಿ ಒಂದಾದ Secular  ಅಂದರೆ ಜಾತ್ಯತೀತ/ ಮತಧರ್ಮ ನಿರಪೇಕ್ಷ ಮೌಲ್ಯವು ಆಳ್ವಿಕೆಗೆ ಜಾತಿಮತಧರ್ಮಗಳ ವಾಂಛೆ ಇರಬಾರದು ಎನ್ನುತ್ತದೆ. ಜಾಗತಿಕವಾಗಿ ಭಾರತದ ಗೌರವವನ್ನು ಹೆಚ್ಚಿಸಿದ ಮೌಲ್ಯ ಇದು. ಆದರೆ ಇಂದು ಈ ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನವನ್ನು ನೇರವಾಗಿ ವಿರೋಧಿಸದೆ ಸಂವಿಧಾನದ ಬೇರುಗಳನ್ನು ಕತ್ತರಿಸುತ್ತದೆ. ಇದು ಭಾರತಕ್ಕೆ ಕೇಡು, ಅಪಶಕುನ ಎರಡೂ ಹೌದು. ಈಗ ಎನ್‌ಪಿಆರ್ ಮಾಡಹೊರಟಿದ್ದಾರೆ. ಇದರೊಳಗೆ ಎನ್‌ಆರ್‌ಸಿ ಬಚ್ಚಿಟ್ಟಿದ್ದಾರೆ. ಸಿಎಎ ಎಂಬ ವಿಷದ ಹಾವೂ ಹೆಡೆಯಾಡಿಸುತ್ತಿದೆ. ಇದನ್ನು ಅಬ್ದುಸ್ಸಲಾಮ್ ಪುತ್ತಿಗೆ ಅವರು ಸರಳವಾಗಿ ಸ್ಪಷ್ಟವಾಗಿ ವಿವರಿಸಿದ್ದಾರೆ: ‘‘ಹೆಜ್ಜೆ 1: ಎನ್‌ಪಿಆರ್ ಹೆಸರಲ್ಲಿ ದೇಶದೆಲ್ಲೆಡೆ ಸಮೀಕ್ಷೆ ನಡೆಸಿ ಹಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದಕ್ಕೊಂದು ಉದಾಹರಣೆ ಕೊಡುವುದಾದರೆ, ಎನ್‌ಪಿಆರ್ ಕೈಪಿಡಿ 2020, ಪುಟ 23ರಲ್ಲಿ ಪ್ರಶ್ನೆ-13(iv) ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೊಡನೆ ಅವನ/ಳ ತಂದೆ ತಾಯಿಯ ಹುಟ್ಟಿದ ದಿನ ಮತ್ತು ಹುಟ್ಟಿದ ಸ್ಥಳದ ಕುರಿತು ದಾಖಲೆಗಳನ್ನು ಕೇಳಲಾಗುತ್ತದೆ. ಅಂತಹ ದಾಖಲೆಗಳನ್ನು ಒದಗಿಸಲು ವಿಫಲರಾದವರನ್ನು ‘ಸಂಶಯಾಸ್ಪದ ನಿವಾಸಿಗಳು’ ಎಂದು ಪರಿಗಣಿಸಲಾಗುತ್ತದೆ. ಹೆಜ್ಜೆ 2: 2003ರ ಪೌರತ್ವ ನಿಯಮಗಳ ಪ್ರಕಾರ, ಈ ರೀತಿ ‘ಸಂಶಯಾಸ್ಪದ ನಿವಾಸಿಗಳು’ ಎಂದು ಗುರುತಿಸಲಾದವರು ಅವರ ತಂದೆ ತಾಯಿಯ ಹುಟ್ಟಿದ ದಿನಾಂಕವನ್ನು ಖಚಿತಪಡಿಸಲಾಗದಿದ್ದಲ್ಲಿ ಅವರ ಹೆಸರನ್ನು ಪೌರರ ಪಟ್ಟಿಯಿಂದ ಕಿತ್ತು ಹಾಕಿ ಎನ್‌ಆರ್‌ಐಸಿ ಮೂಲಕ ವಿಶೇಷ ತನಿಖೆ, ವಿಚಾರಣೆಗಳಿಗೆ ಗುರಿಪಡಿಸಿ ಅಕ್ರಮ ವಲಸಿಗರು illegal immigrants ಎಂದು ಘೋಷಿಸಲಾಗುತ್ತದೆ. ಹೆಜ್ಜೆ 3: ಹೀಗೆ ‘ಅಕ್ರಮ ವಲಸಿಗರು’ ಎಂದು ಗುರುತಿಸಲಾದವರಿಗೆ ಜಿಲ್ಲಾ ರಿಜಿಸ್ಟ್ರಾರ್ ಮುಂದೆ ತಮ್ಮ ಪೌರತ್ವವನ್ನು ಸಾಬೀತುಪಡಿಸಲು 90 ದಿನಗಳ ಕಾಲಾವಕಾಶ ನೀಡಲಾಗುವುದು. ಸಾಬೀತು ಪಡಿಸಲಾಗದಿದ್ದಲ್ಲಿ ಅವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಿ ಡಿಟೆನ್ಶನ್ ಕೇಂದ್ರ detention center ಗಳಿಗೆ ತಳ್ಳಲಾಗುವುದು.’’

ಹೀಗಿದೆ ಎನ್‌ಪಿಆರ್, ಎನ್‌ಆರ್‌ಸಿ, CAA ಕಾಯ್ದೆಗಳ ನಿಗೂಢ ಹೆಜ್ಜೆಗಳು. ಈ ಸಂದರ್ಭದಲ್ಲಿ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ ಬಾಘೆಲ್ ಅವರ ಮಾತುಗಳನ್ನು ನಾವು ಕೇಳಿಸಿಕೊಳ್ಳಬೇಕಾಗಿದೆ. ಅವರು ಹೇಳುತ್ತಾರೆ- ‘‘ಛತ್ತೀಸ್‌ಗಡದ ಅರ್ಧಕ್ಕೂ ಹೆಚ್ಚಿನ ಜನರಿಗೆ ಪೌರತ್ವ ಸಾಬೀತು ಅಸಾಧ್ಯ. ಎನ್‌ಆರ್‌ಸಿ ಜಾರಿಗೊಳಿಸಿದರೆ ರಾಜ್ಯದ ಶೇ. 50ಕ್ಕೂ ಅಧಿಕ ಜನರು ಭೂಮಿ ಅಥವಾ ಭೂ ದಾಖಲೆ ಹೊಂದಿಲ್ಲ. ಅವರಿಗೆ ತಮ್ಮ ಪೌರತ್ವ ಸಾಬೀತು ಪಡಿಸಲು ಹೇಗೆ ಸಾಧ್ಯ?’’ ಎಂದು ಪ್ರಶ್ನಿಸಿ ಆಮೇಲೆ ಅವರು ಹೇಳುತ್ತಾರೆ- ‘‘1906ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಬ್ರಿಟಿಷರು ತಂದಿದ್ದ ಗುರುತು ಯೋಜನೆಯನ್ನು ಗಾಂಧೀಜಿ ವಿರೋಧಿಸಿದ ರೀತಿಯಲ್ಲೇ ಎನ್‌ಆರ್‌ಸಿ ಪ್ರಕ್ರಿಯೆ ವಿರೋಧಿಸುತ್ತೇನೆ. ಎನ್‌ಆರ್‌ಸಿ ಜಾರಿಗೊಂಡರೆ ಅದರ ದಾಖಲೆಗೆ ಸಹಿ ಹಾಕದ ಮೊದಲ ವ್ಯಕ್ತಿ ನಾನೇ ಆಗಲಿದ್ದೇನೆ’’ ಎಂದು. ಎನ್‌ಪಿಆರ್, ಎನ್‌ಆರ್‌ಸಿಯಿಂದ ಉದ್ಭವಿಸಬಹುದಾದ ಒಂದು ಯಾತನಾಮಯವಾದ ದೃಶ್ಯವನ್ನು ನೆನಪಿಸಿಕೊಳ್ಳುವುದಕ್ಕೂ ನನಗೆ ಕಷ್ಟವಾಗುತ್ತಿದೆ. ಅದು ಮೂಲನಿವಾಸಿಗಳ ಪಾಡು. ಭಾರತದಲ್ಲಿ ಶೇ. 8ರಷ್ಟು ಜನರು ಮಾತ್ರ ಮೂಲನಿವಾಸಿಗಳು, ಉಳಿದವರೆಲ್ಲಾ ವಲಸೆಗಾರರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಲನಿವಾಸಿಗಳು ಈಗಲೂ ಬಹುತೇಕ ಅರಣ್ಯವಾಸಿಗಳು. ಇವರು ಅಲ್ಲೇ ಹುಟ್ಟಿ ಅಲ್ಲೇ ಮಣ್ಣಾಗುತ್ತ ಬಂದವರು. ಈಗ, ಎನ್‌ಆರ್‌ಸಿ ಬಂದರೆ ಏನಾಗುತ್ತದೆ? ಭಾರತಕ್ಕೆ ವಲಸೆ ಬಂದವರೇ ಅಧಿಕಾರ ಹಿಡಿದು ಈಗ ಮೂಲನಿವಾಸಿಗಳಿಗೆ ನೀವು ಇಲ್ಲಿಯವರು ಎನ್ನುವುದನ್ನು ಸಾಬೀತುಪಡಿಸಿ ಎಂದು ಕೇಳಿದರೆ ಇದಕ್ಕೆ ಮೂಲನಿವಾಸಿಗಳು ಏನು ತಾನೇ ಹೇಳಿಯಾರು? ‘‘ನೀವು ಬರುವುದಕ್ಕೂ ಮೊದಲಿನಿಂದಲೂ ಇಲ್ಲೇ ಹುಟ್ಟೀ ಇಲ್ಲೇ ಸಾಯುತ್ತಿದ್ದೀವಪ್ಪ. ಬೇಕಾದರೆ ಮರ ಕೇಳು, ಬೆಟ್ಟ ಕೇಳು, ನದಿ ಕೇಳು, ಕಾಡಲ್ಲಿರುವ ಪ್ರಾಣಿಗಳನ್ನು ಕೇಳು... ಅವಕ್ಕೆಲ್ಲಾ ನಾವು ಗೊತ್ತಿದೆ. ಇದನ್ನು ಬಿಟ್ಟರೆ ನಮ್ಮ ಬಳಿ ಏನೂ ಇಲ್ಲ’’ ಎಂದು ಅರಣ್ಯರೋದನ ಮಾಡಬೇಕಾಗುತ್ತದೆ. ಇವರ ಜೊತೆಗೆ ನೆಲೆ ಇಲ್ಲದೆ ಅಲೆಯುತ್ತಿರುವ ಅಲೆಮಾರಿಗಳು, ದಲಿತರು, ಅತಂತ್ರರಾದ ಹಿಂದುಳಿದ ಸಮೂಹಗಳು, ಅಲ್ಪಸಂಖ್ಯಾತರು ಗ್ರಾಮೀಣ ಜನತೆ ಕಣ್ಣುಬಾಯಿ ಬಿಡಬೇಕಾಗುತ್ತದೆ.
ಇದರಲ್ಲೊಂದು ಸಂಚಿನ ವಾಸನೆಯೂ ಇದ್ದಂತಿದೆ. ಮೂಲನಿವಾಸಿಗಳನ್ನು ಎನ್‌ಆರ್‌ಸಿ ನೆಪದಲ್ಲಿ ಅರಣ್ಯದಿಂದ ಸಂಪೂರ್ಣವಾಗಿ ಎತ್ತಂಗಡಿ ಮಾಡುವ ಸಂಚೂ ಇಲ್ಲಿ ಇರಬಹುದು. ಆಗ- ಅರಣ್ಯನಾಶ, ಗಣಿಗಾರಿಕೆ ಮಾಡಿ ಭೂಮಿ ಧ್ವಂಸ ಮಾಡಲು ಕಾರ್ಪೊರೇಟ್ ಕಂಪೆನಿಗಳಿಗೆ ಹಬ್ಬವಾಗುತ್ತದೆ. ಹೀಗೆಲ್ಲಾ ಆದರೆ ದೇಶವನ್ನೇ ಖಾಸಗಿ ಕಂಪೆನಿಗಳಿಗೆ ಮಾರಿದಂತಾಗಿಬಿಡುತ್ತದೆ. ನಮ್ಮ ಪೂರ್ವಿಕರು ಕಟ್ಟಿ ಬೆಳೆಸಿ ಉಳಿಸಿಕೊಂಡು ಬಂದಿದ್ದ ಸಂಸ್ಥೆ ಆಸ್ತಿಪಾಸ್ತಿಗಳನ್ನು ಖಾಸಗಿಗೆ ಮಾರಿಕೊಂಡು ಜೀವನ ದೂಡುತ್ತಿರುವ ಸರಕಾರಕ್ಕೆ ಅರಣ್ಯ ನದಿ, ಬೆಟ್ಟ ಮಾರುವುದು ಸಹಜವೇ ಇರಬಹುದು. ಆಗ, ಕಂಪೆನಿ ಸರಕಾರದ ವಿರುದ್ಧ ಹೋರಾಡಿ ದೇಶ ಸ್ವಾತಂತ್ರ್ಯ ಪಡೆಯಿತು. ಈಗ, ಪಡೆದ ಸ್ವಾತಂತ್ರ್ಯವನ್ನು ಕಂಪೆನಿಗಳಿಗೆ ಮರುಮಾರಾಟ ಮಾಡಿದಂತಾಗಿಬಿಡುತ್ತದೆ. ಉಳಿಗಾಲ ಉಂಟೆ?
ಆದರೀಗ, ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರೋಧಿ ಆಂದೋಲನ ಸರಿಯಾದ ಜಾಗಕ್ಕೆ, ಅಂದರೆ ವಿದ್ಯಾರ್ಥಿಗಳ ಅಂಗಳಕ್ಕೆ ಬಂದಿದೆ. ಭಾರತೀಯತೆ ಮತ್ತು ಸಂವಿಧಾನವನ್ನು ಉಳಿಸಿಕೊಳ್ಳುವುದಕ್ಕಾಗಿ ವಿದ್ಯಾರ್ಥಿಗಳು ಪಣತೊಟ್ಟು ನಿಂತಿದ್ದಾರೆ. ಭಾರತಕ್ಕೆ ಕಷ್ಟ ಬಂದ ಕಾಲದಲ್ಲಿ ಕಾಪಾಡಬಲ್ಲ ಶಕ್ತಿ ಯುವಜನತೆಗೆ ಇದೆ ಎಂದು ಋಜುವಾತು ಮಾಡುತ್ತಿದ್ದಾರೆ. ಪ್ರತಿಭಟನೆಯನ್ನು ತುಂಬಾ ಹೊಣೆಗಾರಿಕೆಯಿಂದಲೂ ನಿಭಾಯಿಸುತ್ತಿದ್ದಾರೆ. ಆದರೂ ಚಳವಳಿಯನ್ನು ದಾರಿತಪ್ಪಿಸಲು ನಾನಾರೀತಿಯ ಪ್ರಯತ್ನಗಳು ನಡೆಯಬಹುದು ಹಾಗೂ ವಿದ್ಯಾರ್ಥಿ ಚಳವಳಿ ಒಳಕ್ಕೆ ಸಮಾಜಘಾತಕ ಶಕ್ತಿಗಳು ನುಸುಳಲೂಬಹುದು. ಉದಾಹರಣೆಗೆ ಮುಸ್ಲಿಮರ ಸೋಗಿನಲ್ಲಿ ರೈಲಿಗೆ ಕಲ್ಲು ಎಸೆಯುತ್ತಿದ್ದ ಐದಾರು ಜನ ಬಿಜೆಪಿಯವರು ಸಿಕ್ಕಿಬಿದ್ದಿದ್ದಾರೆ. ಇದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಚಳವಳಿಗೆ ಈ ಎಚ್ಚರಿಕೆ ಇರಬೇಕು. ಹಾಗೇ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಸಿಕ್ಕಿಹಾಕಿಕೊಂಡ ನಾಲ್ವರು ಪೊಲೀಸರನ್ನು ಮುಸ್ಲಿಮ್ ಯುವಕರ ಗುಂಪೊಂದು ರಕ್ಷಿಸಿದೆ. ಇಂಥ ಹೊಣೆಗಾರಿಕೆಯೂ ಚಳವಳಿಗೆ ಬೇಕಾಗಿದೆ. ಜೊತೆಗೆ ಒಂದು ಚಳವಳಿಯ ಅಂತಃಸತ್ವ ಅದರ ಅಹಿಂಸಾ ನಡೆನುಡಿಗಳಲ್ಲಿದೆ ಎಂಬುದನ್ನು ಯಾವಾಗಲೂ ನೆನಪಿಟ್ಟುಕೊಳ್ಳೋಣ ಹಾಗೂ ಇಂತಹ ಸಂದರ್ಭಗಳಲ್ಲೇ ಹೆಚ್ಚುತ್ತಿರುವ ನಿರುದ್ಯೋಗ, ಕುಸಿಯುತ್ತಿರುವ ಆರ್ಥಿಕತೆ, ಏರುತ್ತಿರುವ ಬೆಲೆ ಏರಿಕೆ ಇಂಥವುಗಳ ಬಗ್ಗೆ ಹೆಚ್ಚೆಚ್ಚು ಮಾತಾಡಬೇಕಾಗಿದೆ.
ಹೌದು, ವಿದ್ಯಾರ್ಥಿ ಯುವಜನತೆ ಹೆಚ್ಚೆಚ್ಚು ಮಾತಾಡಬೇಕಾಗಿದೆ. ಯಾಕೆಂದರೆ ಜನರನ್ನು ಕಿತ್ತು ತಿನ್ನುತ್ತಿರುವ ಸಮಸ್ಯೆಗಳ ಬಗ್ಗೆ ಮಾತಾಡಬೇಕಾದ ಶಾಸನ ಸಭೆ, ಸಂಸತ್ ಸಭೆ ಕಡೆ ನೋಡಿದರೆ, ಯಾವ ಭರವಸೆಯೂ ಕಾಣುತ್ತಿಲ್ಲ. ಇದನ್ನೆಲ್ಲಾ ಪ್ರಶ್ನಿಸಬೇಕಾದ ಸಂಸತ್‌ನಲ್ಲಿ ಅಪರಾಧಿಗಳು, ಕೋಟ್ಯಧಿಪತಿಗಳು ಹೆಚ್ಚಾಗಿದ್ದು ಸಂಸತ್‌ನಿಂದ ಏನನ್ನೂ ನಿರೀಕ್ಷಿಸಲಾಗದು ಎನ್ನುವಂತಾಗಿದೆ ಹಾಗೂ ರಾಜಕೀಯ ಪಕ್ಷಗಳ ಸ್ಥಿತಿಗತಿಯೂ ದಯನೀಯವಾಗಿದೆ. ಕಮ್ಯುನಿಸ್ಟರು ಸ್ಥಗಿತಗೊಂಡಿದ್ದಾರೆ. ಆಮ್ ಆದ್ಮಿ, ಸ್ವರಾಜ್ ಇಂಡಿಯಾದಂತಹ ಪ್ರಯೋಗಶೀಲ ಪಕ್ಷಗಳು ವ್ಯಾಪಕವಾಗುತ್ತಿಲ್ಲ. ಮೋದಿ, ಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿದೆ. ವಿಪರ್ಯಾಸವೆಂದರೆ ಈ ಮೋದಿ, ಶಾ ಆಡಳಿತವು ಸ್ವತಃ ತನ್ನ ಪಕ್ಷ ಬಿಜೆಪಿಯನ್ನೇ ಧ್ವಂಸ ಮಾಡಿಬಿಟ್ಟಿದೆ. ಅತಿದೊಡ್ಡ ಪಕ್ಷ ಎನಿಸಿಕೊಂಡಿರುವ ಬಿಜೆಪಿಗೆ ಒಂದು ರಾಜಕೀಯ ಪಕ್ಷಕ್ಕೆ ಇರಬೇಕಾದ ಯಾವ ಚಹರೆಯೂ ಇಂದು ಉಳಿದಿಲ್ಲ. ಜೀವ ಇಲ್ಲದ ಸತ್ತ ದೇಹದಂತೆ ಇದೆ. ಬಿಜೆಪಿ ಹೆಸರಿನಲ್ಲಿ ಮೋದಿ, ಶಾ ಗ್ಯಾಂಗ್ ಆಡಳಿತ ನಡೆಸುತ್ತಿದೆ.
ಇಂತಹ ಸಂಕಷ್ಟದ ಸಮಯದಲ್ಲಿ, ಹೌದು, ವಿದ್ಯಾರ್ಥಿ ಯುವಜನತೆ ದೇಶವನ್ನು ಮುನ್ನಡೆಸಬೇಕಾಗಿದೆ.

Writer - ದೇವನೂರ ಮಹಾದೇವ

contributor

Editor - ದೇವನೂರ ಮಹಾದೇವ

contributor

Similar News