ಕೇರಳ, ಪಂಜಾಬ್ ಸಿಎಂ ಗಳ ಕ್ರಮ ಉಳಿದ ರಾಜ್ಯಗಳಿಗೆ ಮಾದರಿಯಾಗಲಿ: ಸೀತಾರಾಮ್ ಯೆಚೂರಿ

Update: 2020-01-21 17:24 GMT

ಕಲಬುರಗಿ, ಜ.21: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ದ ಪಂಜಾಬ್ ಹಾಗೂ ಕೇರಳ ಮುಖ್ಯಮಂತ್ರಿಗಳ ಕೈಗೊಂಡ ದಿಟ್ಟ ಕ್ರಮಗಳ ಮಾದರಿಯಲ್ಲಿಯೇ ಉಳಿದ ರಾಜ್ಯಗಳ ಮುಖ್ಯಮಂತ್ರಿ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ತಿಳಿಸಿದ್ದಾರೆ.

ಮಂಗಳವಾರ ಸಿಎಎ ವಿರೋಧಿಸಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪಕ್ಷಭೇದ ಮರೆತು ಪೌರತ್ವ ಕಾಯ್ದೆಯ ವಿರುದ್ದ ನಿರ್ಣಯ ಕೈಗೊಳ್ಳಲಿ ಎಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಬರೀ ಸುಳ್ಳು ಹೇಳುವುದರಲ್ಲೇ ಮಗ್ನರಾಗಿದ್ದಾರೆ. ಅವರು ತಮ್ಮ ವಿದ್ಯಾಭ್ಯಾಸದ ಕುರಿತು ಸುಳ್ಳು ಹೇಳಿದ್ದಾರೆ. ಈಗ ಇಡೀ ದೇಶವನ್ನೇ ಅಪಾಯಕ್ಕೆ ಒಡ್ಡಬಹುದಾದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಬಗ್ಗೆ ಸುಳ್ಳು ಹೇಳುವ ಮೂಲಕ ಜನತೆಯ ಪೌರತ್ವವನ್ನು ಪ್ರಶ್ನಿಸುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಆರ್ಥಿಕತೆ ಕುಸಿದಿದೆ. ನಿರುದ್ಯೋಗಿಗಳ ಪ್ರಮಾಣ ಹೆಚ್ಚುತ್ತಲೆ ಇದೆ. ಜನತೆ ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಕಿಂಚಿತ್ತೂ ಗಮನ ವಹಿಸದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನರನ್ನು ಮತ್ತಷ್ಟು ಸಮಸ್ಯೆಗೆ ಈಡುಮಾಡುವಂತಹ ಕಾನೂನುಗಳನ್ನು ರೂಪಿಸಲು ಹೊರಟಿದೆ. ಇದರ ವಿರುದ್ಧ ಜನಪರ ಸಂಘಟನೆಗಳು, ಜಾತ್ಯತೀತ ಪಕ್ಷಗಳು ಸಂಘಟಿತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಹಿರಿಯ ನಾಯಕರು, ಪ್ರಗತಿಪರ ಚಿಂತಕರು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಚಾರವಾದಿ ಸ್ವಾಮಿ ಅಗ್ನಿವೇಶ್, ಮಾಜಿ ಸಚಿವ ಸಿಎಂ ಇಬ್ರಾಹಿಂ, ಪ್ರಿಯಾಂಕ ಖರ್ಗೆ, ರಾಜಶೇಖರ್ ಪಾಟಲ್, ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಸಿಪಿಎಂ ಮುಖಂಡರಾದ ಕೆ.ನೀಲಾ, ಮಾರುತಿ ಮಾನ್ಪಡೆ, ಶಾಸಕ ರಹೀಮ್, ಹಿರಿಯ ನ್ಯಾಯವಾದಿ ಸಿ.ಎಸ್.ದ್ವಾರಕಾನಾಥ್, ಶಾಸಕ ರಹೀಮ್ ಖಾನ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News