ಕುಮಾರಸ್ವಾಮಿ ರಾಜಕೀಯ ಸ್ಥಿಮಿತ ಕಳೆದುಕೊಂಡಿದ್ದಾರೆ: ಕೇಂದ್ರ ಸಚಿವ ಸದಾನಂದ ಗೌಡ

Update: 2020-01-23 18:05 GMT

ಮೈಸೂರು,ಜ.23: ಸಮಾಜದಲ್ಲಿ ಶಾಂತಿ ಕದಡಿ, ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ಮಾಡುವಂತಹ ಶಕ್ತಿಗಳಿಗೆ, ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡಿರುವ ರಾಜಕೀಯ ಪಕ್ಷಗಳು ಬೆಂಬಲ ನೀಡುತ್ತಿವೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ.

ಸುತ್ತೂರು ಜಾತ್ರ ಮಹೋತ್ಸವದಲ್ಲಿ ಗುರುವಾರ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಸ್ತಿತ್ವ ಕಳೆದುಕೊಂಡ ಪಕ್ಷಗಳನ್ನು ಜನ ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಿದ್ದೂ, ಈ ಪಕ್ಷಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಶಕ್ತಿಗಳಿಗೆ ಪ್ರೋತ್ಸಾಹ ನೀಡುತ್ತಿವೆ. ಈ ಪಕ್ಷಗಳನ್ನು ಜನ ಮುಂದೆಂದೂ ಸ್ವೀಕರಿಸುವುದಿಲ್ಲ ಎಂದು ಹೇಳಿದರು.

ಮಂಗಳೂರಿನಲ್ಲಿ ಶಾಂತಿ ಕಾಪಾಡುವಲ್ಲಿ ಅಲ್ಲಿನ ಮುಖಂಡರು ವಿಫಲರಾಗಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾನಸಿಕ ಸ್ಥಿಮಿತತೆ ಕಳೆದುಕೊಂಡವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಏನು ಮಾತನಾಡುತ್ತೇವೆಂದು ಅವರಿಗೆ ಗೊತ್ತಿಲ್ಲ. ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಂತೆ ಮಾತನಾಡಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ವಿಪಕ್ಷಗಳಿಗೆ ಮಾತನಾಡಲು ಬೇರೆ ವಿಷಯ ಇಲ್ಲ. ಹೀಗಾಗಿ, ಸಂಪುಟ ವಿಸ್ತರಣೆ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆದಾಗಿನಿಂದ ಚಟುವಟಿಕೆಯಿಂದ ಓಡಾಡುತ್ತಿದ್ದಾರೆ. ನೆರೆ ಸಂದರ್ಭದಲ್ಲೂ ಜನರ ಹತ್ತಿರ ಹೋಗಿ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ. ಕೇಂದ್ರದಿಂದಲೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News