ನಿತ್ಯಾನಂದನಿಗೆ ಮತ್ತೊಂದು ಸಂಕಷ್ಟ: ಹೈಕೋರ್ಟ್ ನಿಂದ ನೋಟಿಸ್ ಜಾರಿ

Update: 2020-01-24 16:54 GMT

ಬೆಂಗಳೂರು, ಜ.24: ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ವಿವಾದಿತ ದೇವಮಾನವ ನಿತ್ಯಾನಂದನಿಗೆ ನೀಡಿರುವ ಜಾಮೀನು ರದ್ದು ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನಿತ್ಯಾನಂದ ಹಾಗೂ ಸಿಐಡಿಗೆ ನೋಟಿಸ್ ಜಾರಿಗೊಳಿಸಿದೆ.  

ಈ ಕುರಿತು ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಲೆನಿನ್ ಪರ ವಾದಿಸಿದ ವಕೀಲರು, ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಆದರೆ, ಜಾಮೀನು ಷರತ್ತು ಉಲ್ಲಂಘಿಸಿರುವ ಅವರು, ಕೋರ್ಟ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಅವಧಿ ಮುಗಿದಿರುವ ಪಾಸ್‌ಪೋರ್ಟ್ ಅಡಿ ದೇಶ ತೊರೆದಿದ್ದಾರೆ. ಆದರೆ ಭಾರತದಲ್ಲಿರುವಂತೆ ವಿನಾಯಿತಿಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಜಾಮೀನು ರದ್ದುಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ನಿತ್ಯಾನಂದ ಮತ್ತು ಸಿಐಡಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.

ಕೆಲವೇ ದಿನಗಳ ಹಿಂದಷ್ಟೇ ಅತ್ಯಾಚಾರ ಹಾಗೂ ದೇಣಿಗೆ ಸಂಗ್ರಹಕ್ಕೆ ಮಕ್ಕಳ ಬಳಕೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ನಿತ್ಯಾನಂದ ವಿರುದ್ಧ ಇಂಟರ್ಪೋಲ್ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿತ್ತು. ಇದೀಗ ಜಾಮೀನು ರದ್ದತಿಗೆ ಸಂಬಂಧಿಸಿದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು ನಿತ್ಯಾನಂದನಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News