ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಬಿಎಸ್‌ವೈಯನ್ನು ಕುಟುಕಿದ ಸಿದ್ದರಾಮಯ್ಯ

Update: 2020-01-25 12:46 GMT
ಫೈಲ್ ಚಿತ್ರ

ಬೆಂಗಳೂರು, ಜ. 25: ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರಕಾರದ್ದು, ತೆರಿಗೆ ಸಂಗ್ರಹ ಇಳಿಯುತ್ತಿದೆ, ಸಾಲದ ಹೊರೆ ಹೆಚ್ಚಾಗುತ್ತಿದೆ, ಕೇಂದ್ರದ ಅನುದಾನದ ಬಾಕಿ ಏರುತ್ತಿದೆ. ಶೀಘ್ರದಲ್ಲಿ ನೌಕರರ ಸಂಬಳಕ್ಕೂ ತತ್ವಾರ ಬರಲಿದೆ. ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹಣ ಇಲ್ಲದೆ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ, ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಓಡಿಹೋಗುತ್ತಿದ್ದಾರೆ, ಖಾಲಿ ಖಜಾನೆ ತುಂಬಲು ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡಲು ಪೀಡಿಸುತ್ತಿದ್ದಾರೆ. ಸುಭೀಕ್ಷೆಯಿಂದ ಇದ್ದ ರಾಜ್ಯ ಅರಾಜಕತೆಯತ್ತ ಭರದಿಂದ ಸಾಗಿದೆ ಎಂದು ಟೀಕಿಸಿದ್ದಾರೆ.

‘ಕೇಂದ್ರ ಪ್ರಾಯೋಜತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ, ತೆರಿಗೆ ಪಾಲು ಬರುತ್ತಿಲ್ಲ, ಜಿಎಸ್ಟಿ ಪರಿಹಾರ ಕೊಡುತ್ತಿಲ್ಲ. ಇತ್ತ ಸಂಪುಟ ವಿಸ್ತರಣೆಗೂ ಒಪ್ಪಿಗೆ ನೀಡುತ್ತಿಲ್ಲ. ಕರ್ನಾಟಕದ ಬಗ್ಗೆ ಮೋದಿ-ಶಾ ಜೋಡಿಗೆ ಯಾಕಿಷ್ಟು ಸಿಟ್ಟು?’ ಎಂದು ಅವರು ಪ್ರಶ್ನಿಸಿದ್ದಾರೆ.

ಮುಳುಗುತ್ತಿದ್ದಾರೆ: ‘ಸಂಪುಟ ವಿಸ್ತರಣೆ, ಅತೃಪ್ತರ ಓಲೈಕೆ, ಹೈಕಮಾಂಡ್‌ಗೆ ಮೊರೆ, ಭಿನ್ನಮತೀಯರಿಗೆ ಸಮಾಧಾನ ಇವಿಷ್ಟೇ ಕೆಲಸದಲ್ಲಿ ಬಿಎಸ್‌ವೈ ಆರು ತಿಂಗಳು ಕಳೆದಿದ್ದಾರೆ. ಆಡಳಿತ ಕೈಗೆ ಸಿಗುತ್ತಿಲ್ಲ, ಹೈಕಮಾಂಡ್ ಕ್ಯಾರೇ ಎನ್ನುತ್ತಿಲ್ಲ. ಬಿಎಸ್‌ವೈ ಮುಳುಗುತ್ತಿದ್ದಾರೆ, ಜೊತೆಗೆ ರಾಜ್ಯವನ್ನೂ ಮುಳುಗಿಸಲು ಹೊರಟಿದ್ದಾರೆ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ದಿವಾಳಿಗೆ ನಿರ್ಧಾರ: ‘ಇಪ್ಪತ್ತು ವರ್ಷಗಳಲ್ಲಿಯೇ ಮೊದಲ ಬಾರಿ ಕೇಂದ್ರ ಸರಕಾರದ ವರಮಾನ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿಯೂ ಅದೇ ಸ್ಥಿತಿ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿಎಸ್‌ವೈ ಅವರು ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹತಾಶರನ್ನಾಗಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮೋದಿ-ಶಾ ಜೋಡಿ ಅವರನ್ನು ದಂಡಿಸುತ್ತಿದೆಯೇ? ಬಿಜೆಪಿಯ ಆಂತರಿಕ ಕಲಹಕ್ಕೆ ರಾಜ್ಯದ ಜನ ಬಲಿಪಶುಗಳಾಗುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ಅಧಿಕಾರಿಗಳು ಬಜೆಟ್ ಮಾಡುವುದು ಹೇಗೆ ಎಂದು ತಲೆಮೇಲೆ ಕೈಯಿಟ್ಟು ಕೂತಿದ್ದಾರೆ. ಬಿಎಸ್‌ವೈ ಅವರೇ, ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಹಿತ ಬಲಿಕೊಡಬೇಡಿ’

-ಸಿದ್ದರಾಮಯ್ಯ, ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News