ಆಂಧ್ರದಲ್ಲಿ ಎಲ್ಲ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ: ನಿರ್ಧಾರ ಕೈಬಿಡಲು ಸಿಎಂ ಜಗನ್ ಗೆ ಸಚಿವ ಸುರೇಶ್ ಕುಮಾರ್ ಪತ್ರ

Update: 2020-01-29 13:59 GMT

ಬೆಂಗಳೂರು, ಜ.29: ಆಂಧ್ರಪ್ರದೇಶ ಸರಕಾರವು ಇತ್ತೀಚೆಗೆ ತನ್ನ ರಾಜ್ಯದಲ್ಲಿನ ಎಲ್ಲ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ ಹಾಗೂ ಪ್ರತಿ ವಿದ್ಯಾರ್ಥಿ ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂಬ ನಿರ್ಧಾರ ಕೈಗೊಂಡಿರುವ ಕುರಿತು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಅಲ್ಲಿನ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್, ಗಡಿಯಲ್ಲಿ ವಾಸಿಸುವ ಕನ್ನಡಿಗರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪದೇಶ ರಾಜ್ಯಗಳ ಸಂಬಂಧ ಐತಿಹಾಸಿಕವಾದುದು. ಕೃಷ್ಣದೇವರಾಯನ ಕಾಲಕ್ಕಿಂತಲೂ ಮೊದಲಿನಿಂದಲೂ ಈ ಎರಡೂ ರಾಜ್ಯಗಳು ಯಾವಾಗಲೂ ಸಹೋದರ ಸಂಬಂಧದಲ್ಲೆ ನಡೆದುಕೊಂಡು ಬರುತ್ತಿವೆ. ಭಾಷೆ ಸೇರಿದಂತೆ ಎಲ್ಲ ವಿಷಯಗಳಲ್ಲೂ ನಮ್ಮೆರಡು ರಾಜ್ಯಗಳು ಪರಸ್ಪರ ಸೌಹಾರ್ದದಿಂದಲೆ ಇವೆ. ಇದು ಎರಡೂ ರಾಜ್ಯಗಳಿಗೂ ಅಭಿಮಾನದ ಸಂಗತಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಇತ್ತೀಚೆಗೆ ಆಂಧ್ರಪ್ರದೇಶ ಸರಕಾರ ಸೀಮಾಂಧ್ರದಲ್ಲಿನ ಎಲ್ಲ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ ಹಾಗೆಯೇ ಪ್ರತಿ ವಿದ್ಯಾರ್ಥಿಯನ್ನು ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂಬ ನಿರ್ಧಾರ ಕೈಗೊಂಡಿರುವುದು ನಮ್ಮೆರಡು ರಾಜ್ಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆಯಾದಂತಾಗಿದೆ ಎಂದು ಅವರು ತಿಳಿಸಿದ್ದಾರೆ. ಇದು ಆಂಧ್ರಪ್ರದೇಶದ ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರ ಮನೋಸ್ಥೈರ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸಾಂಸ್ಕೃತಿಕ ಸಂಘರ್ಷ ಇತರೆ ಯಾವುದೇ ಸಾಮಾಜಿಕ ಸಂಘರ್ಷಗಳಿಗಿಂತಲೂ ತೀವ್ರ ನೋವಿನ ಸಂಗತಿಯಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಮ್ಮ ರಾಜ್ಯದ ಉದಾರ ಮತ್ತು ಸಮಗ್ರ ಆಡಳಿತ ಕಾರ್ಯವಿಧಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹತ್ತಾರು ತೆಲುಗು ಮಾಧ್ಯಮ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಆಂಧ್ರಪ್ರದೇಶ ಕೈಗೊಂಡ ನಿರ್ಧಾರ ಕನ್ನಡ ಭಾಷಾ ಶಿಕ್ಷಕರ ಜೀವನವನ್ನು ಅಪಾಯಕ್ಕೆ ಸಿಕ್ಕಿಸುವುದು ಮಾತ್ರವೇ ಅಲ್ಲ, ಕರ್ನಾಟಕದ ಹೊರಗೆ ವಾಸಿಸುತ್ತಾರೆಂಬ ಒಂದೇ ಕಾರಣಕ್ಕಾಗಿ ಕನ್ನಡಿಗರ ಮಕ್ಕಳು ತಮ್ಮ ಮಾತೃಭಾಷೆಯಿಂದ ವಂಚಿತರಾಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಾಗಾಗಿ ಕನ್ನಡವನ್ನು ಭಾಷೆಯಾಗಿ ಇಲ್ಲವೇ ಮಾಧ್ಯಮವಾಗಿ ಕಲಿಸುವ ಅಲ್ಪಸಂಖ್ಯಾತ ಭಾಷಾ ಶಾಲೆಗಳನ್ನು ಮುಂದುವರೆಸುವ ಮೂಲಕ ತಮ್ಮ ರಾಜ್ಯದಲ್ಲಿ ವಾಸಿಸುವ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸುರೇಶ್ ಕುಮಾರ್ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News