ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣ: ಆರೋಪಿ ಸೆರೆ
ಬೆಂಗಳೂರು, ಜ.29: ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದ ಪ್ರಕರಣ ಸಂಬಂಧ ಯುವಕನೋರ್ವನನ್ನು ಇಲ್ಲಿನ ಕಾಟನ್ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯ ಚಿರಾಗ್ ಆರ್.ಮೆಹ್ತಾ (21) ಬಂಧಿತ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಖಾಸಗಿ ಶಾಲೆಯಿಂದ ಮನೆಗೆ ಬಂದಿದ್ದ 4ನೆ ತರಗತಿಯ ಬಾಲಕನನ್ನು ಅಪಹರಿಸಿಕೊಂಡು ಬಾಡಿಗೆಗೆ ಪಡೆದ ಸ್ಕೂಟರ್ನಲ್ಲಿ ಪರಾರಿಯಾಗಿದ್ದ. ಬಾಲಕ ನಾಪತ್ತೆಯಾಗಿದ್ದರಿಂದ ಆತಂಕಗೊಂಡ ಅವರ ತಂದೆ ವೀರಾಲಾಲ್, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಆರೋಪಿಯನ್ನು ಕೇವಲ 1 ಗಂಟೆಯೊಳಗೆ ಬಂಧಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಬಾಲಕನ ತಂದೆ ವೀರಾ ಲಾಲ್, ಕಾಟನ್ಪೇಟೆ ಮುಖ್ಯ ರಸ್ತೆಯಲ್ಲಿ ವಾಸಿಸುತ್ತಿದ್ದು, ಚಿಕ್ಕಪೇಟೆಯಲ್ಲಿ ಎಲೆಕ್ಟ್ರಿಕ್ ಅಂಗಡಿ ಇಟ್ಟುಕೊಂಡಿದ್ದರು. ಅವರ ಬಳಿ ಹೆಚ್ಚಿನ ಹಣವಿರುವುದನ್ನು ಗಮನಿಸಿ ಆರೋಪಿಯು ಅಪಹರಣ ಮಾಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.