ದ.ಕ.ಜಿಲ್ಲಾ ಕಾಂಗ್ರೆಸ್ ಸಭೆ: ಫೆ.6ರಂದು ಪೌರತ್ವ ಸಂರಕ್ಷಣಾ ಕಾರ್ಯಾಗಾರ

Update: 2020-01-29 17:34 GMT

ಮಂಗಳೂರು, ಜ.29: ಕೇಂದ್ರ ಸರಕಾರದ ಸಂವಿಧಾನ ರೋಧಿ ಪೌರತ್ವ ಕಾಯ್ದೆಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಹಿತಿ ನೀಡುವ ನಿಟ್ಟಿನಲ್ಲಿ ಸಂವಿಧಾನ ಬದ್ಧವಾದ ಪೌರತ್ವ ಸಂರಕ್ಷಣಾ ಕಾರ್ಯಾಗಾರವನ್ನು ಫೆ.6ರಂದು ಕುಲಶೇಖರ ಕೋರ್ಡೆಲ್ ಚರ್ಚ್ ಹಾಲ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ದೇಶದಾದ್ಯಂತ ಕೇಂದ್ರ ಸರಕಾರದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಜನರು ಈ ಕಾಯ್ದೆುಂದಾಗಿ ಆತಂಕಕ್ಕೀಡಾಗಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದ್ದು, ನಾಗರಿಕರಿಗೆ ಗ್ರಾಮಮಟ್ಟದಲ್ಲಿ ಈ ಕಾಯ್ದೆಯ ದುಷ್ಪರಿಣಾಮವನ್ನು ಪ್ರಚುರಪಡಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಭಾಪತಿ ಬಿ.ಎಲ್ ಶಂಕರ್, ಸಾಮಾಜಿಕ ಹೋರಾಟಗಾರ್ತಿ ಭವ್ಯಾ ನರಸಿಂಹಮೂರ್ತಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದರು.

ವೇದಿಕೆಯಲ್ಲಿ ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್ ಲೋಬೊ, ಕಾಂಗ್ರೆಸ್ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಶಶಿಧರ್ ಹೆಗ್ಡೆ, ಮುಹಮ್ಮದ್ ಮೋನು, ಕವಿತಾ ಸನಿಲ್, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಸಂತೋಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮ.ನ.ಪಾ ಸದಸ್ಯರುಗಳು, ಜಿಪಂ ಮತ್ತು ತಾಪಂ ಸದಸ್ಯರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News